ಚೆನ್ನೈ: ಕೋವಿಡ್–19 ಹರಡುವಿಕೆ ತಡೆಗೆ ವಿಧಿಸಲಾಗಿರುವ ಲಾಕ್ಡೌನ್ ಅನ್ನು ತಮಿಳುನಾಡು ಸರ್ಕಾರ ಜೂನ್ 7ರ ವರೆಗೆ ವಿಸ್ತರಣೆ ಮಾಡಿದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನರು ಮನೆಯಲ್ಲೇ ಇದ್ದು ಸರ್ಕಾರದ ಜತೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮನವಿ ಮಾಡಿದ್ದಾರೆ.
ಪಡಿತರ ಕಾರ್ಡ್ ಹೊಂದಿರುವವರಿಗೆ ಪಡಿತರ ಅಂಗಡಿಗಳ ಮೂಲಕ 13 ಬಗೆಯ ದಿನಸಿ ವಸ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಅಗತ್ಯ ವಸ್ತುಗಳ ಅಂಗಡಿಗಳಿಗೆ ಬೆಳಿಗ್ಗೆ 7ರಿಂದ ಸಂಜೆ 6ರ ವರೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಸಣ್ಣ ಸರಕು ಸಾಗಣೆ ವಾಹನಗಳ ಮೂಲಕ ದಿನಸಿ ವಸ್ತುಗಳ ವಿತರಣೆಗೆ ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಕೋವಿಡ್ ಮಾರ್ಗಸೂಚಿಗಳಿಗೆ ಎಲ್ಲರೂ ಬದ್ಧರಾಗಿರಬೇಕು. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆಯನ್ನು ಎಲ್ಲರೂ ಪಾಲಿಸಬೇಕು ಎಂದೂ ಅವರು ಹೇಳಿದ್ದಾರೆ.
ಕೆಲವು ವಿನಾಯಿತಿಗಳೊಂದಿಗೆ ತಮಿಳುನಾಡಿನಲ್ಲಿ ಮೇ 10ರಂದು ಎರಡು ವಾರಗಳ ಲಾಕ್ಡೌನ್ ಘೋಷಿಸಲಾಗಿತ್ತು. ಬಳಿಕ ಕಠಿಣ ನಿರ್ಬಂಧಗಳೊಂದಿಗೆ ಅದನ್ನು ಮೇ 31ರ ವರೆಗೆ ವಿಸ್ತರಿಸಲಾಗಿತ್ತು. ಮೇ 24ರಿಂದ 31ರ ಅವಧಿಯಲ್ಲಿ ತರಕಾರಿ, ದಿನಸಿ ವಸ್ತುಗಳ ವ್ಯಾಪಾರಕ್ಕೂ ನಿರ್ಬಂಧ ವಿಧಿಸಲಾಗಿದ್ದು, ಬೆಳಿಗ್ಗೆ 6ರಿಂದ 10ರ ವರೆಗೆ ಮಾತ್ರ ಅವಕಾಶ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.