ADVERTISEMENT

ತಮಿಳುನಾಡು ಬಿಜೆಪಿ ನಾಯಕಿ ಗಾಯತ್ರಿ ರಘುರಾಮ್ ರಾಜೀನಾಮೆ: ಅಣ್ಣಾಮಲೈ ವಿರುದ್ಧ ಆರೋಪ

​ಪ್ರಜಾವಾಣಿ ವಾರ್ತೆ
Published 3 ಜನವರಿ 2023, 9:27 IST
Last Updated 3 ಜನವರಿ 2023, 9:27 IST
ಗಾಯತ್ರಿ ರಘುರಾಮ್
ಗಾಯತ್ರಿ ರಘುರಾಮ್   

ಚೆನ್ನೈ: ನಟಿ ಹಾಗೂ ತಮಿಳುನಾಡು ಬಿಜೆಪಿ ಮಹಿಳಾ ಘಟಕದ ನಾಯಕಿ ಗಾಯತ್ರಿ ರಘುರಾಮ್ ಅವರು ಬಿಜೆಪಿಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷರ ನಡೆಗೆ ಬೇಸತ್ತು ರಾಜೀನಾಮೆ ನೀಡಿರುವುದಾಗಿ ಅವರ ಆಪ್ತರು ಹೇಳಿಕೊಂಡಿದ್ದಾರೆ. ಗಾಯತ್ರಿ ಅವರೇ ಟ್ವೀಟ್‌ ಮಾಡಿ ಬಿಜೆಪಿಗೆ ರಾಜೀನಾಮೆ ನೀಡಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

'ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಮಹಿಳೆಯರಿಗೆ ಗೌರವ, ಸಮಾನ ಅವಕಾಶಗಳು ಸಿಗುತ್ತಿಲ್ಲ ಎಂದಿರುವ ಅವರು, ಭಾರವಾದ ಹೃದಯದಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅಣ್ಣಾಮಲೈ ಅವರ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವಾಗಿದೆ. ಇದರಿಂದಾಗಿ ನಾನು ಪಕ್ಷ ತೊರೆಯುತ್ತಿದ್ದೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿರುವ ಮಾಜಿ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ಗಾಯತ್ರಿ ರಘುರಾಮ್‌ ಗಂಭೀರ ಆರೋಪ ಮಾಡಿದ್ದಾರೆ. ಅಣ್ಣಾಮಲೈ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ, 6 ತಿಂಗಳು ಅಮಾನತು ಮಾಡಿ ಪಕ್ಷದಿಂದ ದೂರವಿರಿಸಿದರು ಎಂದಿದ್ದಾರೆ.

ಪಕ್ಷದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಗಾಯತ್ರಿ ರಘುರಾಮನ್‌ ಅವರು ಪಕ್ಷದ ಶಿಸ್ತು ಉಲ್ಲಂಘನೆ, ಪಕ್ಷಕ್ಕೆ ಮುಜುಗರ ಉಂಟುಮಾಡುವುದು, ಪಕ್ಷದ ನಿಯಮಗಳನ್ನು ಮೀರುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿದ್ದರಿಂದ ಅವರನ್ನು ಪಕ್ಷದಿಂದ 6 ತಿಂಗಳವರೆಗೆ ಅಮಾನತ್ತು ಮಾಡಲಾಗಿತ್ತು.

ಗಾಯತ್ರಿ ರಘುರಾಮ್‌ ಅವರು ಮಹಿಳಾ ಘಟಕದ ಅಧ್ಯಕ್ಷೆ ಮಾತ್ರವಲ್ಲದೇ ಸಾಗರೋತ್ತರ ತಮಿಳು ಅಭಿವೃದ್ಧಿ ವಿಭಾಗದ ಅಧ್ಯಕ್ಷೆಯಾಗಿಯೂ ಕೆಲಸ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.