ಸೇಲಂ: ತೂತ್ತುಕುಡಿ ಜಿಲ್ಲೆ ಶಾಂತನ್ಕುಲಂನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ತಂದೆ, ಮಗ ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಭಾನುವಾರ ಇಲ್ಲಿ ಹೇಳಿದರು.
ತನಿಖೆಯನ್ನು ಸಿಬಿಐಗೆ ವಹಿಸುವ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ಗೆ ತಿಳಿಸಿ, ಪ್ರಕರಣವನ್ನು ಸಿಬಿಐಗೆ ವಹಿಸುವ ಸಂಬಂಧ ಅನುಮೋದನೆ ಪಡೆಯಲಾಗುವುದು ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಮೊಬೈಲ್ ಫೋನ್ ಮಾರಾಟದ ಅಂಗಡಿ ನಡೆಸುತ್ತಿದ್ದ ಪಿ.ಜಯರಾಜ್, ಮಗ ಫೆನಿಕ್ಸ್ ಅವರು ಲಾಕ್ಡೌನ್ ನಿಯಮ ಉಲ್ಲಂಘಿಸಿ, ನಿಗದಿತ ಅವಧಿ ಮೀರಿ ವ್ಯಾಪಾರ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಪೊಲೀಸರು ಅವರನ್ನು ಬಂಧಿಸಿದ್ದರು.
ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಅವರಿಗೆ ಗಂಭೀರವಾದ ಗಾಯಗಳಾಗಿದ್ದವು. ಹೀಗಾಗಿ ಕೋವಿಲ್ಪಟ್ಟಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಜೂನ್ 23ರಂದು ಮೃತಪಟ್ಟರು. ಪೊಲೀಸರು ನೀಡಿದ ಚಿತ್ರಹಿಂಸೆಯಿಂದಾಗಿ ತಂದೆ, ಮಗ ಮೃತಪಟ್ಟಿದ್ದಾರೆ ಎಂದು ಅವರ ಬಂಧುಗಳು ಆರೋಪಿಸಿದ್ದಾರೆ. ಈ ಘಟನೆ ಬಗ್ಗೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.