ಅಹಮದಾಬಾದ್: ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಪ್ರಕರಣವನ್ನು ವರ್ಗಾಯಿಸುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ವಿಚಾರಣಾ ನ್ಯಾಯಾಲಯಕ್ಕೆ ಶನಿವಾರ ಮಾಹಿತಿ ನೀಡಿದರು.
ಸುಪ್ರೀಂ ಕೋರ್ಟ್ ನ.6ರಂದು ಈ ಬಗ್ಗೆ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದೂ ತಿಳಿಸಿದರು.
‘ಗುಜರಾತಿನವರು ಮಾತ್ರ ಕೊಲೆಗಡುಕರು’ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾದ ಮಾನನಷ್ಟ ಪ್ರಕರಣದ ವಿಚಾರಣೆಗೆ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಡಿ.ಜೆ.ಪಾರ್ಮರ್ ಎದುರು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿತ್ತು. ಯಾದವ್ ಇದರಿಂದ ವಿನಾಯಿತಿ ಕೋರಿದ್ದರು. ಹೀಗಾಗಿ, ಕೋರ್ಟ್ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿದೆ.
ದೂರುದಾರರ ಪರ ವಕೀಲ ಹರೀಶ್ ಮೆಹ್ತಾ, ಸುಪ್ರೀಂ ಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲ. ಈ ಕುರಿತು ಯಾವುದೇ ನಿರ್ದೇಶನಗಳನ್ನೂ ನೀಡಿಲ್ಲ. ಹೀಗಾಗಿ ನ್ಯಾಯಾಲಯವು ಯಾದವ್ ಅವರ ಗೈರಿನಲ್ಲೂ ವಿಚಾರಣೆ ಮುಂದುವರಿಸಬೇಕು ಎಂದು ವಾದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.