ADVERTISEMENT

ಪ್ರಶ್ನೆಪತ್ರಿಕೆ ಸೋರಿಕೆ: ತೆಲಂಗಾಣ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಂಧನ

ಪಿಟಿಐ
Published 5 ಏಪ್ರಿಲ್ 2023, 15:15 IST
Last Updated 5 ಏಪ್ರಿಲ್ 2023, 15:15 IST
   

ಹೈದರಾಬಾದ್: 10ನೇ ತರಗತಿಯ(ಎಸ್‌ಎಸ್‌ಸಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಬಂಧಿಸಲಾಗಿದೆ.

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ವಾರಂಗಲ್‌ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸಂಜಯ್ ಕುಮಾರ್ ಬಂಧನವಾಗಿದೆ. ಪ್ರಕರಣದಲ್ಲಿ ಅವರನ್ನು ಪ್ರಮುಖ ಆರೋಪಿ ಎಂದು ಉಲ್ಲೇಖಿಸಲಾಗಿದೆ.

ಕರೀಂನಗರ ಸಂಸದರಾಗಿರುವ ಸಂಜಯ್ ಕುಮಾರ್ ಅವರನ್ನು ಮಂಗಳವಾರ ತಡರಾತ್ರಿ ಕರೀಂನಗರದ ಅವರ ನಿವಾಸದಿಂದಲೇ ಬಂಧಿಸಿ ಕರೆದೊಯ್ಯಲಾಗಿದೆ ಎಂದು ವರದಿ ತಿಳಿಸಿದೆ.

ADVERTISEMENT

ಎಸ್‌ಎಸ್‌ಸಿ ಪರೀಕ್ಷೆಯ ಎರಡನೇ ದಿನವಾದ ಮಂಗಳವಾರ, ಸೋರಿಕೆಯಾಗಿದ್ದ ಪ್ರಶ್ನೆಪತ್ರಿಕೆಯು ವಾಟ್ಸ್‌ಆ್ಯಪ್ ಸೇರಿದಂತೆ ಮೆಸೇಜಿಂಗ್ ಆ್ಯಪ್‌ಗಳಲ್ಲಿ ಪತ್ತೆಯಾಗಿತ್ತು. ವಾಟ್ಸ್ಆ್ಯಪ್ ಗ್ರೂಪಿಗೆ ಪ್ರಶ್ನೆಪತ್ರಿಕೆ ಶೇರ್ ಮಾಡಿದ್ದ ವ್ಯಕ್ತಿ ಸಂಜಯ್ ಕುಮಾರ್ ಅವರಿಗೂ ಒಂದು ಕಾಪಿ ಕಳುಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜಯ್ ಕುಮಾರ್ ಅವರು ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಸೃಷ್ಟಿಸುವ ಮೂಲಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸಿದ್ದರು ಎಂದೂ ಪೊಲೀಸರು ಹೇಳಿದ್ದಾರೆ.

ಹಿಂದಿ ಪ್ರಶ್ನೆಪತ್ರಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು, ತನಿಖೆ ಚುರುಕುಗೊಳಿಸಿದ್ದರು. ಮಂಗಳವಾರ ಸುದ್ದಿ ವಾಹಿನಿಯ ಮಾಜಿ ಪತ್ರಕರ್ತ ಮತ್ತು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಪ್ರಯೋಗಾಲಯ ಸಹಾಯಕನನ್ನು ಬಂಧಿಸಿದ್ದರು. ಬಳಿಕ, ತಡರಾತ್ರಿ ಸಂಜಯ್ ಕುಮಾರ್ ಅವರನ್ನು ಬಂಧಿಸಲಾಗಿದೆ.

ಆರೋಪಿಗಳ ದೂರವಾಣಿ ಕರೆ ಮತ್ತು ಸಂದೇಶಗಳನ್ನು ವಿಶ್ಲೇಷಿಸಿ ಕಲೆ ಹಾಕಿರುವ ತಾಂತ್ರಿಕ ಸಾಕ್ಷ್ಯಗಳಿಂದ ಅವರು ಪ್ರಶ್ನೆಪತ್ರಿಕೆ ಸೋರಿಕೆಯ ಸಂಚಿನಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.