ADVERTISEMENT

ತೆಲಂಗಾಣ | 10 BRS ಶಾಸಕರ ಅನರ್ಹತೆ: ಸ್ಪೀಕರ್‌ಗೆ 3 ತಿಂಗಳ ಗಡುವು

ಪಿಟಿಐ
Published 31 ಜುಲೈ 2025, 13:19 IST
Last Updated 31 ಜುಲೈ 2025, 13:19 IST
   

ನವದೆಹಲಿ: ತೆಲಂಗಾಣದಲ್ಲಿ ಬಿಆರ್‌ಎಸ್‌ ಪಕ್ಷದ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಮೂರು ತಿಂಗಳ ಒಳಗೆ ನಿರ್ಧಾರ ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್‌ ಅವರಿಗೆ ಸುಪ್ರೀಂ ಕೋರ್ಟ್‌ ಗುರುವಾರ ಸೂಚಿಸಿದೆ.

10 ಮಂದಿ ಬಿಆರ್‌ಎಸ್‌ ಶಾಸಕರು ಆಡಳಿತಾರೂಢ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದು ಇನ್ನು ಮೂರು ತಿಂಗಳ ಒಳಗೆ ನಿರ್ಧಾರ ಕೈಗೊಳ್ಳುವಂತೆ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ರಾಜಕೀಯ ಪಕ್ಷಾಂತರವನ್ನು ನಿಯಂತ್ರಿಸದಿದ್ದರೆ, ಅದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ADVERTISEMENT

ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ನೇತೃತ್ವದ ನ್ಯಾಯಪೀಠವು, ‘ನಾವು ಯಾವುದೇ ನಿರ್ದೇಶನ ನೀಡದಿದ್ದರೆ, ಸ್ಪೀಕರ್‌ ಮತ್ತದೇ ರೀತಿ ಮಾಡಿ, ‘ಶಸ್ತ್ರಚಿಕಿತ್ಸೆ ಯಶಸ್ವಿ, ರೋಗಿ ಸಾವು’ ಎಂಬ ಸನ್ನಿವೇಶದಂತಾಗಲಿದೆ’ ಎಂದು ಹೇಳಿತು.

ಪಕ್ಷಾಂತರಕ್ಕೆ ಕಡಿವಾಣ ಹಾಕುವುದಕ್ಕಾಗಿ ಪಕ್ಷಾಂತರ ನಿಷೇಧ ಕಾಯ್ದೆ ರೂಪಿಸಲಾಗಿದೆ. ಈ ಕಾಯ್ದೆಯ ಆಧಾರದಲ್ಲಿ ಶಾಸಕರನ್ನು ಅನರ್ಹಗೊಳಿಸುವುದರಿಂದ ಕಾಯ್ದೆಯ ಉದ್ದೇಶ ಈಡೇರುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುವ ಕೆಲಸವನ್ನು ಸ್ಪೀಕರ್‌ ಅಥವಾ ಸಭಾಪತಿ ಅವರಿಗೆ ವಹಿಸುವ ಬಗ್ಗೆ ಸಂಸತ್ತು ನಿರ್ಧರಿಸಬೇಕು. ಈ ವಿಷಯದಲ್ಲಿ ಸಲಹೆ ನೀಡುವುದು ನ್ಯಾಯಾಂಗದ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ತಿಳಿಸಿತು.

ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ತತ್ವಗಳನ್ನು ರಕ್ಷಿಸುವುದು ಮೂಲಭೂತ ಕರ್ತವ್ಯ. ಈ ವಿಚಾರದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕರನ್ನು ಅನರ್ಹಗೊಳಿಸುವ ವಿಧಾನ ಸೂಕ್ತವಾಗಿದೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಬೇಕಿದೆ. ಇಷ್ಟಾಗಿಯೂ ಈ ಕುರಿತು ಸಂಸತ್ತು ಅಂತಿಮ ನಿರ್ಧಾರ ಕೈಗೊಳ್ಳಬೇಕು ಹೇಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.