ADVERTISEMENT

ಶೀಘ್ರ ರಾಷ್ಟ್ರೀಯ ಪಕ್ಷ ಸ್ಥಾಪನೆ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌

ಪಿಟಿಐ
Published 11 ಸೆಪ್ಟೆಂಬರ್ 2022, 14:08 IST
Last Updated 11 ಸೆಪ್ಟೆಂಬರ್ 2022, 14:08 IST
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ಅವರ ಹೈದರಾಬಾದ್‌ನಲ್ಲಿರುವ ಅಧಿಕೃತ ನಿವಾಸಕ್ಕೆ ಎಚ್‌.ಡಿ.ಕುಮಾರಸ್ವಾಮಿ ಅವರು ಭಾನುವಾರ ಭೇಟಿ ನೀಡಿದರು –ಪಿಟಿಐ ಚಿತ್ರ
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ಅವರ ಹೈದರಾಬಾದ್‌ನಲ್ಲಿರುವ ಅಧಿಕೃತ ನಿವಾಸಕ್ಕೆ ಎಚ್‌.ಡಿ.ಕುಮಾರಸ್ವಾಮಿ ಅವರು ಭಾನುವಾರ ಭೇಟಿ ನೀಡಿದರು –ಪಿಟಿಐ ಚಿತ್ರ   

ಹೈದರಾಬಾದ್: ಶೀಘ್ರವೇ ರಾಷ್ಟ್ರೀಯ ಪಕ್ಷಕ್ಕೆ ಚಾಲನೆ ನೀಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ (ಕೆಸಿಆರ್‌) ಭಾನುವಾರ ಹೇಳಿಕೆ ನೀಡಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಮುಖ್ಯಸ್ಥರೂ ಆಗಿರುವ ರಾವ್‌ ಅವರ ಕಚೇರಿಯಿಂದ ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗಿದೆ.

ಅದರಲ್ಲಿ,ತೆಲಂಗಾಣ ಆಂದೋಲನ ಆರಂಭಿಸುವುದಕ್ಕೂ ಮೊದಲು ಕೈಗೊಂಡಿದ್ದ ಹಾಗೆಯೇ, ಪರ್ಯಾಯ ರಾಷ್ಟ್ರೀಯ ಕಾರ್ಯಸೂಚಿ (ಅಜೆಂಡಾ) ರೂಪಿಸುವ ಮುನ್ನ ವಿಚಾರವಾದಿಗಳು, ಅರ್ಥಶಾಸ್ತ್ರಜ್ಞರು ಹಾಗೂ ವಿವಿಧ ಕ್ಷೇತ್ರಗಳ ತಜ್ಞರ ಜೊತೆ ಸಮಾಲೋಚನೆ ನಡೆಸಿ ಒಮ್ಮತಕ್ಕೆ ಬರಲಾಗಿದೆ ಎಂದು ತಿಳಿಸಲಾಗಿದೆ.

ADVERTISEMENT

'ಶೀಘ್ರವೇ ರಾಷ್ಟ್ರೀಯ ಪಕ್ಷ ಸ್ಥಾಪಿಸಲಾಗುವುದು ಮತ್ತು ಅದಕ್ಕಾಗಿ ನೀತಿಗಳನ್ನು ರೂಪಿಸುವ ಕೆಲಸ ನಡೆದಿದೆ' ಎಂದು ಉಲ್ಲೇಖಿಸಲಾಗಿದೆ.

ರಾವ್‌–ಕುಮಾರಸ್ವಾಮಿ ಭೇಟಿ: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಚಂದ್ರಶೇಖರ ರಾವ್‌ ಅವರನ್ನು ಭಾನುವಾರ ಭೇಟಿಯಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕೆಸಿಆರ್‌ ಅವರ ಹೈದರಾಬಾದ್‌ನಲ್ಲಿರುವ ಅಧಿಕೃತ ನಿವಾಸ ಪ್ರಗತಿಭವನದಲ್ಲಿ ಭೋಜನಕೂಟದ ಬಳಿಕ ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆ ಎಂದೂ ಹೇಳಿವೆ.

ರಾಷ್ಟ್ರ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳ ಪಾತ್ರ ಹಾಗೂ ಪ್ರಸ್ತುತ ರಾಜಕೀಯ ಸನ್ನಿವೇಶಗಳ ಕುರಿತು ಕುಮಾರಸ್ವಾಮಿ ಹಾಗೂ ಕೆಸಿಆರ್‌ ಅವರು ಚರ್ಚೆ ನಡೆಸಿದ್ದಾರೆ ಎಂದಿವೆ.

ಟಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್‌ ಅವರನ್ನೂ ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ‘ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಕೆ.ಟಿ. ರಾಮರಾವ್‌ ಅವರು ನೀಡಿದ ಆತಿಥ್ಯಕ್ಕೆ ಋಣಿಯಾಗಿದ್ದೇನೆ’ ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.