ಹೈದರಾಬಾದ್: ತೆಲಂಗಾಣ ರಾಜ್ಯ ಲೋಕಸೇವಾ ಆಯೋಗದ (ಟಿಎಸ್ಪಿಎಸ್ಸಿ) ಪರೀಕ್ಷೆಯ ಅಧಿಸೂಚನೆಯನ್ನು ಮುಂದೂಡಿದ್ದರಿಂದ ಮನನೊಂದು ಪರೀಕ್ಷಾ ಆಕಾಂಕ್ಷಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರವಳಿಕಾ(25) ಮೃತ ಯುವತಿ. ಅಶೋಕ ನಗರದ ಹಾಸ್ಟೆಲ್ನಲ್ಲಿ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರವಳಿಕಾ ಟಿಎಸ್ಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಆಕೆಯ ಕೋಣೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. 'ಕುಟುಂಬ ಸದಸ್ಯರಲ್ಲಿ ನಾನು ಕ್ಷಮೆ ಕೇಳುತ್ತೇನೆ. ನಿಮಗಾಗಿ ನನ್ನಿಂದ ಏನನ್ನೂ ಮಾಡಲು ಸಾಧ್ಯವಾಗಿಲ್ಲ' ಎಂದು ಆಕೆ ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾಳೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸರ್ಕಾರದ ವಿರುದ್ಧ ಪ್ರತಿಭಟನೆ:
ಯುವತಿ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ಶವವನ್ನು ಸ್ಥಳಾಂತರಿಸಲು ಪೊಲೀಸರಿಗೆ ಅವಕಾಶ ನೀಡದೆ ಮುಖ್ಯರಸ್ತೆ ಬಂದ್ ಮಾಡಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಬಿಜೆಪಿ ಸಂಸದ ಕೆ.ಲಕ್ಷ್ಮಣ್ ಯುವತಿ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ‘ಕಠಿಣ ಪರಿಶ್ರಮಿ, ವಿದ್ಯಾರ್ಥಿನಿ ಪ್ರವಳಿಕಾ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಹಲವು ತಿಂಗಳುಗಳಿಂದ ಆಕೆ ಸರ್ಕಾರಿ ಪರೀಕ್ಷೆಗಳಿಗೆ ಶ್ರದ್ಧೆಯಿಂದ ತಯಾರಿ ನಡೆಸುತ್ತಿದ್ದಳು. ಆದರೆ ಬಿಆರ್ಎಸ್ ಸರ್ಕಾರ ಪದೇ ಪದೇ ಪರೀಕ್ಷೆಗಳನ್ನು ರದ್ದು, ಮುಂದೂಡಿಕೆ ಮಾಡಿದ್ದರಿಂದ ಮನನೊಂದ ಆಕೆ ಈ ನಿರ್ಧಾರ ಕೈಗೊಂಡಿದ್ದಾರೆ' ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.