ADVERTISEMENT

ಲಖನೌ: ಶಸ್ತ್ರಚಿಕಿತ್ಸೆ; ‌‌ದೃಷ್ಟಿ ಕಳೆದುಕೊಂಡ 10 ಮಂದಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 16:19 IST
Last Updated 18 ಫೆಬ್ರುವರಿ 2026, 16:19 IST
   

ಲಖನೌ: ಉತ್ತರ ಪ್ರದೇಶದ ಗೋರಖಪುರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದವರ ಪೈಕಿ 10 ಮಂದಿ ದೃಷ್ಟಿಯನ್ನೇ ಕಳೆದುಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ರೋಗಿಗಳಲ್ಲಿ ಸೋಂಕು ಪತ್ತೆಯಾಗಿದ್ದು, ಅದರಿಂದಲೇ ದೃಷ್ಟಿ ಕಳೆದುಕೊಳ್ಳುವಂತಾಗಿದೆ ಎಂದು ಮೂಲಗಳು ತಿಳಿಸಿವೆ. 

ಖಾಸಗಿ ಆಸ್ಪತ್ರೆಯೊಂದು ಇತ್ತೀಚೆಗೆ ಆಯೋಜಿಸಿದ್ದ ಕಣ್ಣು ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರದಲ್ಲಿ ಸುಮಾರು 30 ಮಂದಿ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು.

ಈ ಪೈಕಿ ಹಲವರಿಗೆ ಶಸ್ತ್ರಚಿಕಿತ್ಸೆಯ ಬಳಿಕ ಕಣ್ಣು ನೋವು, ಕೀವು ಕಾಣಿಸಿಕೊಂಡಿದೆ. ನಂತರ ರೋಗಿಗಳು ಆಸ್ಪತ್ರೆಗೆ ಧಾವಿಸಿದ್ದು, ಅವರನ್ನು ಲಖನೌ ಹಾಗೂ ವಾರಾಣಸಿಗಳಲ್ಲಿರುವ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ADVERTISEMENT

ಶಸ್ತ್ರಚಿಕಿತ್ಸೆಗೆ ಬಳಸಿದ್ದ ಉಪಕರಣಗಳನ್ನು ಸೂಕ್ತವಾಗಿ ಶುದ್ಧೀಕರಿಸದ ಕಾರಣದಿಂದ ಶಸ್ತ್ರಚಿಕಿತ್ಸೆಯ ನಂತರ ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗೆ ಆದೇಶಿಸಲಾಗಿದೆ ಎಂದು ಗೋರಖಪುರದ ಮುಖ್ಯ ವೈದ್ಯಾಧಿಕಾರಿ (ಸಿಎಂಒ) ಡಾ. ರಾಜೇಶ್‌ ಝಾ ಹೇಳಿದ್ದಾರೆ. ಜತೆಗೆ ಶಸ್ತ್ರಚಿಕಿತ್ಸೆ ನಡೆದ ಘಟಕಕ್ಕೆ ಬೀಗ ಹಾಕಲಾಗಿದೆ.

ಈಗಾಗಲೇ 10 ಮಂದಿ ದೃಷ್ಟಿ ಕಳೆದುಕೊಂಡಿದ್ದು, ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಇನ್ನೂ ಐದು ಮಂದಿಯಲ್ಲಿಯೂ ಸೋಂಕು ಪತ್ತೆಯಾಗಿದೆ. ಹೀಗಾಗಿ ದೃಷ್ಟಿ ಕಳೆದುಕೊಂಡವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.