ಮುಂಬೈ: ವೃತ್ತಿ ಶಿಕ್ಷಣ ಕೋರ್ಸ್ಗಳ ಬಾಕಿ ಉಳಿದಿರುವ ಅಂತಿಮ ವರ್ಷದ, ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಪಡಿಸುವಂತೆ ಸಂಬಂಧಿಸಿದ ಪರೀಕ್ಷಾ ನಿಯಂತ್ರಣ ಮಂಡಳಿಗಳಿಗೆ ಸೂಚಿಸಬೇಕು ಎಂದು ಕೋರಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಅಂತಿಮ ವರ್ಷದ, ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸದಿರಲು ಹಾಗೂ ವಿಶ್ವವಿದ್ಯಾಲಯ ಅಂತಿಮಗೊಳಿಸುವ ಸೂತ್ರದ ಆಧಾರದಲ್ಲಿ ಪದವಿ ಫಲಿತಾಂಶ ಘೋಷಿಸಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪರಿಸ್ಥಿತಿ ಸುಧಾರಿಸಿದ ನಂತರ ಪರೀಕ್ಷೆಗಳನ್ನು ನಡೆಸಲು, ಇದಕ್ಕೆ ಹಾಜರಾಗುವ ಆಯ್ಕೆಯನ್ನು ವಿದ್ಯಾರ್ಥಿಗಳಿಗೆ ನೀಡಬಹುದು. ಪೂರಕವಾಗಿ, ಈ ಪರೀಕ್ಷಾ ವ್ಯವಸ್ಥೆಯನ್ನು ನಿಯಂತ್ರಿಸುವ ಸಂಬಂಧಿಸಿ ಮಂಡಳಿಗಳಿಂದ ಇದಕ್ಕೆ ಅನುಮೋದನೆ ಪಡೆಯಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಪ್ರಸಕ್ತ ಶೈಕ್ಷಣಿಕ ವರ್ಷದ ಫಲಿತಾಂಶ ಮತ್ತು ಮುಂದಿನ ಶೈಕ್ಷಣಿಕ ವರ್ಷದ ಆರಂಭ ಕುರಿತು ವಿದ್ಯಾರ್ಥಿಗಳು, ಪೋಷಕರಲ್ಲಿ ಆತಂಕ ಇರುವ ಹಿನ್ನೆಲೆಯಲ್ಲಿ ಈ ಸೂಚನೆ ಅಗತ್ಯವಾಗಿದೆ ಎಂದು ಠಾಕ್ರೆ ಪತ್ರದಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.