ADVERTISEMENT

ವಲಸಿಗರ ಸಮಸ್ಯೆ ನಿರ್ವಹಿಸಲು ‘ತಜ್ಞ’ ಸಂಸ್ಥೆ ಅಲ್ಲ: ಸುಪ್ರೀಂ ಕೋರ್ಟ್

ಪಿಟಿಐ
Published 7 ಏಪ್ರಿಲ್ 2020, 20:20 IST
Last Updated 7 ಏಪ್ರಿಲ್ 2020, 20:20 IST
   

ನವದೆಹಲಿ: ‘21 ದಿನಗಳ ಲಾಕ್‌ಡೌನ್‌ನಿಂದಾಗಿ ವಲಸಿಗ ಕಾರ್ಮಿಕರ ಆರೋಗ್ಯ ಮತ್ತು ಅವರ ನಿರ್ವಹಣೆ ಕುರಿತು ಉಂಟಾಗಿರುವ ಸಮಸ್ಯೆಗಳನ್ನು ನಿರ್ವಹಿಸಲು ಸುಪ್ರೀಂ ಕೋರ್ಟ್ ‘ತಜ್ಞ’ ಸಂಸ್ಥೆ ಅಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ಹಾಗೂ ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ದೀಪಕ್ ಗುಪ್ತಾ ಅವರ ಪೀಠ ಹೇಳಿದೆ.

ನಾಗರಿಕ ಹಕ್ಕುಗಳ ಕಾರ್ಯಕರ್ತರಿಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮಂಗಳವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿತು.

ಈ ಪಿಐಎಲ್‌ಗೆ ಸಂಬಂಧಿಸಿ ನೀಡಲಾಗಿದ್ದ ನೋಟಿಸ್‌ಗೆ ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರತಿಕ್ರಿಯೆ ಪರಿಗಣಿಸಿದ ಪೀಠ, ‘ವಲಸಿಗ ಕಾರ್ಮಿಕರ ನೆರವಿಗಾಗಿ ಕೇಂದ್ರ ಸರ್ಕಾರ ಸಹಾಯವಾಣಿ ಆರಂಭಿಸಿದೆ. ಮುಂದಿನ 10–15 ದಿನಗಳ ಅವಧಿಗೆ ಕೇಂದ್ರದ ನಿರ್ಣಯಗಳಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ. ಏಪ್ರಿಲ್ 13ರಂದು ಮುಂದಿನ ವಿಚಾರಣೆ ನಡೆಸಲಾಗುವುದು’ ಎಂದು ಹೇಳಿತು.

ADVERTISEMENT

ಲಾಕ್‌ಡೌನ್‌ನಿಂದಾಗಿ ಉದ್ಯೋಗವಂಚಿತರಾಗಿರುವ ವಲಸೆ ಕಾರ್ಮಿಕರ ಹಕ್ಕುಗಳನ್ನು ಕಾಪಾಡಿ ಅವರಿಗೆ ವೇತನ, ಆಹಾರ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಕೋರಿ ಈ ಪಿಐಎಲ್ ಸಲ್ಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.