ADVERTISEMENT

ಕಾಂಗ್ರೆಸ್‌ನಲ್ಲಿ ಈಗ ಜಿ 23 ಎಂಬ ಬಣವಿಲ್ಲ: ಮಲ್ಲಿಕಾರ್ಜುನ ಖರ್ಗೆ 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಅಕ್ಟೋಬರ್ 2022, 10:39 IST
Last Updated 2 ಅಕ್ಟೋಬರ್ 2022, 10:39 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ಕಾಂಗ್ರೆಸ್‌ನಲ್ಲಿ ‘ಜಿ 23’ ಎಂಬ ಭಿನ್ನಮತೀಯ ಬಣ ಈಗ ಇಲ್ಲ.ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ಹೋರಾಡಲು ಎಲ್ಲರೂ ಈಗ ಒಂದಾಗಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

‘ಈಗ ಜಿ 23 ಬಣವಿಲ್ಲ. ಎಲ್ಲಾ ನಾಯಕರು (ಜಿ 23) ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ಒಟ್ಟಾಗಿ ಕೆಲಸ ಮಾಡಲು ಬಯಸುತ್ತಾರೆ. ಇದೇ ಕಾರಣಕ್ಕೆ ನನ್ನನ್ನು ಬೆಂಬಲಿಸುತ್ತಿದ್ದಾರೆ’ ಎಂದು ಹೇಳಿದರು.

ADVERTISEMENT

‘ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ನನ್ನ ನಾಮಪತ್ರವನ್ನು ಪಕ್ಷದ ಹಲವು ಹಿರಿಯ ನಾಯಕರು ಬೆಂಬಲಿಸಿದ್ದಾರೆ. ನಾನು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಪಕ್ಷದ ಹಲವು ಮುಖಂಡರು ಹೇಳಿದ್ದರು. ಅವರ ಪ್ರೋತ್ಸಾಹದಿಂದ ನಾನು ಇಂದು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ’ ಎಂದು ಅವರು ತಿಳಿಸಿದರು.

ಪಕ್ಷದಲ್ಲಿ ವ್ಯಾಪಕ ಸುಧಾರಣೆ ಬಯಸಿದ್ದ ಜಿ -23 ನಾಯಕರು ಸೋನಿಯಾ ಗಾಂಧಿ ಅವರಿಗೆ 2020ರ ಆಗಸ್ಟ್‌ನಲ್ಲಿ ಪತ್ರ ಬರೆದಿದ್ದರು.

ಈ ಗುಂಪಿನ ಹಲವರು, ಖರ್ಗೆ ಅವರ ಉಮೇದುವಾರಿಕೆಯನ್ನು ಅನುಮೋದಿಸಿ ಸಹಿ ಮಾಡಿದ್ದಾರೆ. ನಾಮಪತ್ರ ಸಲ್ಲಿಸಲು ಖರ್ಗೆ ಅವರು ಪಕ್ಷದ ಕೇಂದ್ರ ಕಚೇರಿಗೆ ತೆರಳಿದಾಗ ಹಿರಿಯ ನಾಯಕರಾದ ಭೂಪಿಂದರ್ ಸಿಂಗ್ ಹೂಡಾ, ದಿಗ್ವಿಜಯ ಸಿಂಗ್, ಪೃಥ್ವಿರಾಜ್ ಚವಾಣ್, ಎ.ಕೆ.ಆ್ಯಂಟನಿ, ಅಭಿಷೇಕ್ ಮನು ಸಿಂಘ್ವಿ, ಅಜಯ ಮಾಕನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.