ನವದೆಹಲಿ: ದೆಹಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿಗೆ ಆಡಳಿತ ಹೇಗೆ ನಡೆಸಬೇಕೆಂಬುವುದು ಗೊತ್ತಿಲ್ಲ. ಹೀಗಾಗಿ ಜನರಿಗೆ ಉತ್ತಮ ಸೇವೆ ಒದಗಿಸಲು ಬಿಜೆಪಿಯಿಂದ ಸಾಧ್ಯವಾಗುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕಿ ಆತಿಶಿ ಆರೋಪ ಮಾಡಿದ್ದಾರೆ.
ಪ್ರತಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ತಿಂಗಳು ಪಕ್ಷ ಅಧಿಕಾರಕ್ಕೆ ಬಂದಾಗಿನಿಂದಲೂ ದೆಹಲಿಯಲ್ಲಿ ವಿದ್ಯುತ್ ಕಡಿತ ಹೆಚ್ಚಾಗಿದೆ. ಹೀಗಾಗಿ ಜನರು ಅನಾನುಕೂಲತೆಯನ್ನು ಅನುಭವಿಸುತ್ತಿದ್ದಾರೆ. ಕೇಜ್ರಿವಾಲ್ ಅಧಿಕಾರಕ್ಕೆ ಬರುವ ಮುನ್ನ ಪ್ರತಿ ಮನೆಯಲ್ಲೂ ಇನ್ವರ್ಟರ್ಗಳು ಇರುತ್ತಿದ್ದವು. ಆದರೆ ಕೇಜ್ರಿವಾಲ್ ಅಧಿಕಾರದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ವಿದ್ಯುತ್ ಸಮಸ್ಯೆ ಇರಲಿಲ್ಲ ಎಂದು ಹೇಳಿದ್ದಾರೆ.
ಎಎಪಿ ಸರ್ಕಾರದ ಅವಧಿಯಲ್ಲಿ ದಿನದ 24 ಗಂಟೆಯೂ ದೆಹಲಿಯಲ್ಲಿ ವಿದ್ಯುತ್ ಸರಬರಾಜು ಇರುತ್ತಿತ್ತು ಎಂದು ಅಂಕಿ–ಅಂಶಗಳ ಸಮೇತ ಆತಿಶಿ ಮಾಹಿತಿ ನೀಡಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರವು ಜನರಿಗೆ ಅನಾನುಕೂಲತೆಯನ್ನು ಸೃಷ್ಟಿಸಿದ್ದು, ಆಡಳಿತ ನಡೆಸಲು ಅಸಮರ್ಥ ಆಗಿದೆ ಎಂದು ಆತಿಶಿ ಆಕ್ರೋಶ ವ್ಯಕ್ತಡಿಸಿದ್ದಾರೆ.
70 ಸದಸ್ಯರ ಬಲ ಹೊಂದಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ 26 ವರ್ಷಗಳ ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.