ನವದೆಹಲಿ: ‘ಕೋವಿಡ್–19 ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ವಾಗ್ವಾದಕ್ಕಿಳಿಯಲು ಇಲ್ಲವೇ ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ಇದು ಸಮಯವಲ್ಲ. ಲೆಫ್ಟಿನೆಂಟ್ ಗವರ್ನರ್ ನೀಡಿರುವ ಆದೇಶಗಳನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.
ಆನ್ಲೈನ್ ಮೂಲಕ ಸುದ್ದಿಗೋಷ್ಠಿ ನಡೆಸಿದ ಅವರು, ‘ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್–19 ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿವೆ. ಸರ್ಕಾರಕ್ಕೆ ಹಿಂದೆಂದೂ ಕಾಣದಂಥ ಸವಾಲು ಎದುರಾಗಿದೆ. ಇಂಥ ಸಮಯದಲ್ಲಿ ಭಿನ್ನಾಭಿಪ್ರಾಯ ಬಿಟ್ಟು, ಈ ಮಹಾಮಾರಿಯ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕಿದೆ’ ಎಂದರು.
‘ಭಾರಿ ಬಹುಮತ ಇರುವ, ಚುನಾಯಿತ ಸರ್ಕಾರವೊಂದು ಕೈಗೊಂಡ ನಿರ್ಣಯವನ್ನು ತಿರಸ್ಕರಿಸುವ ಅಧಿಕಾರ ಕೇಂದ್ರ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರಿಗಿಲ್ಲ ಎಂಬುದಾಗಿ ಕೆಲವರು ಟಿ.ವಿ ಚಾನೆಲ್ಗಳಲ್ಲಿ ಹೇಳುತ್ತಿದ್ದಾರೆ. ಆದರೆ, ನಾವು ಮಾತ್ರ ಕೇಂದ್ರ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರಿಂದ ಬಂದ ಆದೇಶಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸುತ್ತೇವೆ’ ಎಂದೂ ಹೇಳಿದರು.
ದೆಹಲಿಯ ಸರ್ಕಾರ ಅಧೀನದ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ದೆಹಲಿ ಜನರಿಗೆ ಮಾತ್ರ ಚಿಕಿತ್ಸೆ ನೀಡುವುದಾಗಿ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹೊರಡಿಸಿದ್ದ ಆದೇಶವನ್ನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ರದ್ದುಗೊಳಿಸಿದ್ದಾರೆ. ಅಲ್ಲದೇ, ದೆಹಲಿಯಲ್ಲಿ ಸಮುದಾಯ ಮಟ್ಟದಲ್ಲಿ ಕೊರೊನಾ ಸೋಂಕು ಹರಡುತ್ತಿದೆ ಎಂಬುದಾಗಿ ಘೋಷಿಸಬೇಕು ಎಂಬ ದೆಹಲಿ ಸರ್ಕಾರದ ವಾದವನ್ನು ಕೇಂದ್ರ ಸರ್ಕಾರದ ಅಧಿಕಾರಿಗಳು ತಳ್ಳಿ ಹಾಕಿದ್ದಾರೆ.
‘ಚಿಕಿತ್ಸೆಗಾಗಿ ಬೇರೆ ರಾಜ್ಯಗಳ ಜನರು ದೆಹಲಿಗೆ ಬರತೊಡಗುವುದರಿಂದ ಆರೋಗ್ಯ ಮೂಲಸೌಕರ್ಯ ಹೆಚ್ಚಿಸಬೇಕಾಗುತ್ತದೆ. ಇದಕ್ಕಾಗಿ 1.5 ಲಕ್ಷ ಹಾಸಿಗೆಗಳ ಅಗತ್ಯವಿದ್ದು, ಈ ಪೈಕಿ 80 ಸಾವಿರ ಹಾಸಿಗೆಗಳನ್ನು ದೆಹಲಿ ನಿವಾಸಿಗಳಿಗಾಗಿಯೇ ಮೀಸಲಿಡಬೇಕಾಗುತ್ತದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.