ADVERTISEMENT

ಸ್ವದೇಶದಲ್ಲಿ ಆಡುವ ಮತಾಂಧ ಮಾತಿನ ವಿದೇಶಿ ಪರಿಣಾಮದ ಬಗ್ಗೆ ಅರಿವಿರಬೇಕು: ತರೂರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜೂನ್ 2022, 8:07 IST
Last Updated 6 ಜೂನ್ 2022, 8:07 IST
ಶಶಿ ತರೂರು
ಶಶಿ ತರೂರು    

ನವದೆಹಲಿ: 'ಸ್ವದೇಶದಲ್ಲಿ ಕುಳಿತು ಮತಾಂಧ ಅಭಿಪ್ರಾಯಗಳನ್ನು ವ್ಯಕ್ತಪಡಿಸುವವರು, ಅದರಿಂದ ವಿದೇಶದಲ್ಲಿ ಆಗುವ ಪರಿಣಾಮಗಳ ಬಗ್ಗೆ ಎಚ್ಚರದಿಂದಿರಬೇಕು’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಕುರಿತು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ, ಕುವೈತ್ ಮತ್ತು ಬಹ್ರೇನ್‌ಗಳಲ್ಲಿ ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸುತ್ತಿರುವ ಘಟನೆಯನ್ನು ಉಲ್ಲೇಖಿಸಿ ಅವರು ಈ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ತರೂರ್‌, ‘ಸ್ವದೇಶದಲ್ಲಿ ಕುಳಿತು ಮತಾಂಧ ಹೇಳಿಕೆ ನೀಡುವವರು ವಿದೇಶದಲ್ಲಿ ಅದರಿಂದ ಆಗುವ ಪರಿಣಾಮಗಳ ಬಗ್ಗೆ ಎಚ್ಚರದಿಂದಿರಬೇಕು. ಭಾರತವು ವಿಶ್ವದಲ್ಲಿ ಘನತೆ ಹೊಂದಿದೆ. ಇದು ಕೋಮುವಾದಿ ಮನಸ್ಸಿನವರ ಬೇಜವಾಬ್ದಾರಿಯಿಂದ ದುರ್ಬಲಗೊಳ್ಳುತ್ತಿದೆ. ಅಂಥವರನ್ನು ಆಡಳಿತರೂಢ ಪಕ್ಷ ಬಹಳ ಕಾಲದಿಂದ ಲಗಾಮು ಹಾಕದೇ ಬಿಟ್ಟಿದೆ’ ಎಂದು ಅವರು ಹೇಳಿದ್ದಾರೆ.

ADVERTISEMENT

ಬಿಜೆಪಿ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ದೃಶ್ಯ ಮಾಧ್ಯಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಕುರಿತು ನೀಡಿದ್ದಾರೆ ಎನ್ನಲಾದ ಆಕ್ಷೇಪಾರ್ಹ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿದ್ದ ಬಿಜೆಪಿ, ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಅಮಾನತು ಮಾಡಿತ್ತು. ಜತೆಗೆ, ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ್ದ ದೆಹಲಿ ಬಿಜೆಪಿ ಘಟಕದ ಮಾಧ್ಯಮ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಅವರನ್ನೂ ಪಕ್ಷದಿಂದ ಉಚ್ಚಾಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.