ಮುಂಬೈ (ಪಿಟಿಐ): ‘ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪ್ರಕರಣದ ತನಿಖೆಯನ್ನು ಪ್ರಾಮಾಣಿಕವಾಗಿ ಮತ್ತು ನಿಷ್ಪಕ್ಷಪಾತವಾಗಿ ನಡೆಸುವುದು ಕೆಲವು ಸ್ಥಾಪಿತ ಶಕ್ತಿಗಳಿಗೆ ಬೇಕಾಗಿಲ್ಲ. ಹೀಗಾಗಿ ನನ್ನ ವಿರುದ್ಧ ಲಂಚದ ಆರೋಪ ಮಾಡಲಾಗುತ್ತಿದೆ. ನನ್ನನ್ನು ಬಂಧಿಸುವ ಮತ್ತು ಕೆಲಸದಿಂದ ವಜಾ ಮಾಡುವ ಬೆದರಿಕೆ ಹಾಕಲಾಗುತ್ತಿದೆ’ ಎಂದು ಎನ್ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಆರೋಪಿಸಿದ್ದಾರೆ.
ಎನ್ಡಿಪಿಎಸ್ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಅವರು ಈ ಆರೋಪ ಮಾಡಿದ್ದಾರೆ. 'ಡ್ರಗ್ಸ್ ಪ್ರಕರಣದಲ್ಲಿ ನಾನು ಮಹಾರಾಷ್ಟ್ರ ಸರ್ಕಾರದ ಸಚಿವ ನವಾಬ್ ಮಲಿಕ್ ಅವರ ಅಳಿಯನನ್ನು ಬಂಧಿಸಿದ್ದೆ. ಅವರಿಗೆ ಈಗಾಗಲೇ ಜಾಮೀನು ದೊರೆತಿದೆ. ಆದರೆ ಅವರನ್ನು ಬಂಧಿಸಿದ ಕಾರಣಕ್ಕೆ ನನ್ನನ್ನು ಗುರಿ ಮಾಡಲಾಗುತ್ತಿದೆ. ನನಗೆ ಮತ್ತು ನನ್ನ ಕುಟುಂಬದವರಿಗೆ ಬೆದರಿಕೆ ಹಾಕಲಾಗುತ್ತಿದೆ. ಇದರಿಂದ ರಕ್ಷಣೆ ನೀಡಿ’ ಎಂದು ಅವರು ಕೋರಿದ್ದರು.
‘ನನ್ನ ತಾಯಿ ಮರಣ ಹೊಂದಿದ್ದಾರೆ. ಆದರೆ ಅವರ ಹೆಸರಿನಲ್ಲೂ ನನ್ನ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಪ್ರಭಾವಿ ವ್ಯಕ್ತಿಯ ಕುಟುಂಬದ ವಿರುದ್ಧ ಕ್ರಮ ತೆಗೆದುಕೊಂಡೆ ಎಂಬ ಒಂದೇ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.
ಇದೇ ರೀತಿಯ ಅರ್ಜಿಯನ್ನು ಅವರು ಮುಂಬೈ ಪೊಲೀಸ್ ಆಯುಕ್ತರಿಗೂ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.