ADVERTISEMENT

ಪುಲ್ವಾಮಾದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2020, 7:50 IST
Last Updated 20 ಜನವರಿ 2020, 7:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ವಾಚಿ ಗ್ರಾಮದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಸೋಮವಾರ ಮುಂಜಾನೆ ಗುಂಡಿನ ಚಕಮಕಿ ನಡೆದಿದ್ದು, ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಗ್ರಾಮದಲ್ಲಿ ಇಬ್ಬರು ಅಥವಾ ಮೂವರು ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್ 55 ಮತ್ತು ಜಮ್ಮು ಮತ್ತು ಕಾಶ್ಮೀರದ ವಿಶೇಷ ಪೊಲೀಸ್ ಪಡೆ ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡಿತ್ತು.

ಕಾರ್ಯಾಚರಣೆ ವೇಳೆ ನಿವಾಸಗಳಲ್ಲಿ ಅಡಗಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿದ್ದಾರೆ. ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಹಲವಾರು ಉಗ್ರ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಎನ್‌ಕೌಂಟರ್‌ಗೆ ಬಲಿಯಾದ ಓರ್ವ ಉಗ್ರನನ್ನು ಶೋಪಿಯಾನದ ಜೈನಪೋರಾ ಗ್ರಾಮದ ಅದಿಲ್ ಶೇಖ್ ಎಂದು ಗುರುತಿಸಲಾಗಿದೆ. ಈತ ಸೆಪ್ಟೆಂಬರ್ 29, 2018ರಂದು ಶ್ರೀನಗರದ ಜವಾಹರ್ ನಗರದಲ್ಲಿರುವ ಅಂದಿನ ಪಿಡಿಪಿ ಶಾಸಕ ಅಜಾಜ್ ಮಿರ್ ಅವರ ನಿವಾಸದಿಂದ ಎಂಟು ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡುವ ಜವಾಬ್ದಾರಿಯನ್ನು ಹೊಂದಿದ್ದ.

ಮತ್ತೋರ್ವನನ್ನು ವಾಸೀಂ ವಾನಿ ಎಂದು ಗುರುತಿಸಲಾಗಿದ್ದು, ಉರ್ಪೊರಾ ಗ್ರಾಮದವನು. ಮತ್ತೋರ್ವ ಉಗ್ರನ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.