ಶ್ರೀನಗರ: ಭದ್ರಾತಾಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರ ಎನ್ಕೌಂಟರ್ ನಡೆದಿದ್ದು, ಮೂವರು ಪೊಲೀಸ್ ಸಿಬ್ಬಂದಿ ಹುತಾತ್ಮರಾದ ಮೂರು ಪ್ರತ್ಯೇಕ ಘಟನೆಗಳು ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಬುಡ್ಗಾಂ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಶುಕ್ರವಾರ ನಡೆದಿವೆ.
ಅತಿ ಭದ್ರತಾ ವ್ಯವಸ್ಥೆಯ ಏರ್ಪೋರ್ಟ್ ರಸ್ತೆಯಲ್ಲಿನ ಬಾಘಾಟ್ ಪ್ರದೇಶದಲ್ಲಿ ಉಗ್ರರು ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಅತೀ ಸಮೀಪದಿಂದ ಗುಂಡು ಹಾರಿಸಿದ್ದಾರೆ. ಗಾಯಗೊಂಡಿದ್ದ ಪೊಲೀಸ್ ಕಾನ್ಸ್ಟೆಬಲ್ಗಳಾದ ಸೊಹೈಲ್ ಮತ್ತು ಮೊಹಮ್ಮದ್ ಯೂಸುಫ್ ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೆ ಹುತಾತ್ಮರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಶ್ರೀನಗರದಲ್ಲಿ ನಡೆದ ಉಗ್ರರ ಎರಡನೇ ದಾಳಿ ಇದು. ನಗರದ ಅತೀ ಭದ್ರತಾ ವ್ಯವಸ್ಥೆ ಇರುವ ದುರ್ಗಾನಾಗ್ ಪ್ರದೇಶದಲ್ಲಿ ರೆಸ್ಟೋರೆಂಟ್ ಮಾಲೀಕರ ಮಗನ ಮೇಲೆ ಉಗ್ರರು ಗುಂಡು ಹಾರಿಸಿ, ಗಾಯಗೊಳಿಸಿದ್ದರು.
ಬುಡ್ಗಾಂ ಜಿಲ್ಲೆಯ ಬೀರ್ವಾ ಪ್ರದೇಶದ ಜಾನಿಗಂ ಹಳ್ಳಿಯಲ್ಲಿ ಉಗ್ರರು ಅಡಗಿರುವ ಮಾಹಿತಿ ಆಧರಿಸಿ, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಉಗ್ರರು ಭದ್ರತಾಪಡೆಗಳ ಮೇಲೆ ಗುಂಡು ಹಾರಿಸಿದ್ದಾರೆ. ಆಗ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇದರಲ್ಲಿ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಹುತಾತ್ಮರಾಗಿದ್ದಾರೆ ಎಂದು ಭದ್ರತಾ ಪಡೆ ಅಧಿಕಾರಿಗಳು ಹೇಳಿದ್ದಾರೆ.
ಶೋಪಿಯಾನ್ ಜಿಲ್ಲೆಯ ಬುಡ್ಗಾಂ ಜಿಲ್ಲೆಯಲ್ಲಿ ನಡೆದ ಇನ್ನೊಂದು ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳ ಗುಂಡಿಗೆ ಮೂವರು ಉಗ್ರರು ಹತರಾಗಿದ್ದಾರೆ. ಉಗ್ರರ ಗುರುತು ಪತ್ತೆಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.