ಕೊಚ್ಚಿ: ತ್ರಿಕ್ಕಾಕರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಲ್ಡಿಎಫ್ ಅಭ್ಯರ್ಥಿ ಜೋ ಜೋಸೆಫ್ ಪರ ಪ್ರಚಾರ ಮಾಡುವುದಾಗಿ ಕಾಂಗ್ರೆಸ್ನ ಹಿರಿಯ ನಾಯಕ ಕೆ.ವಿ. ಥಾಮಸ್ ಹೇಳಿದ್ದಾರೆ.
ಕಾಂಗ್ರೆಸ್ನ ರಾಜ್ಯ ಘಟಕದ ನಾಯಕತ್ವದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಥಾಮಸ್, ಎಲ್ಡಿಎಫ್ ಅಭ್ಯರ್ಥಿ ಪರ ಪ್ರಚಾರ ಮಾಡಿದರೂ ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ನ ಚುನಾವಣಾ ಸಮಾವೇಶದಲ್ಲಿ ಪ್ರಚಾರದ ಅಂಗವಾಗಿ ನಾನು ಭಾಗವಹಿಸಲಿದ್ದೇನೆ. ಉಪಚುನಾವಣೆಗೆ ಸಂಬಂಧಿಸಿದಂತೆ, ಇತರೆ ಪ್ರಚಾರ ಸಭೆಗಳಲ್ಲೂ ಭಾಗಿಯಾಗಲಿದ್ದೇನೆ. ಕಾಂಗ್ರೆಸ್ ನಾಯಕತ್ವ ಬೇಕಿದ್ದರೆ ನನ್ನನ್ನು ಪಕ್ಷದಿಂದ ಹೊರಹಾಕಬಹುದು’ ಎಂದು ಸವಾಲೆಸೆದರು.
‘ನಾನು ಯಾವತ್ತೂ ಕಾಂಗ್ರೆಸ್ನವನು. ಕಾಂಗ್ರೆಸ್ ಪಕ್ಷ ಬಿಟ್ಟು ಬೇರೆ ಪಕ್ಷ ಸೇರುವುದಿಲ್ಲ. ಎಲ್ಡಿಎಫ್ ಪಕ್ಷದ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷದವನಾಗಿಯೇ ಭಾಗವಹಿಸುತ್ತಿದ್ದೇನೆ. ನಾನು ಯಾವಾಗಲೂ ಅಭಿವೃದ್ಧಿ ಪರವಾಗಿ ನಿಲ್ಲುತ್ತೇನೆ’ ಎಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.