ಜಮ್ಮು: ದೇವಾಲಯ ಹಾಗೂ ಅದಕ್ಕೆ ಸಂಬಂಧಿಸಿದ ಮೂಲಸೌಕರ್ಯಗಳ ನಿರ್ಮಾಣಕ್ಕೆ ತಿರುಮಲ ತಿರುಪತಿ ದೇವಸ್ಥಾನ ಮಂಡಳಿಗೆ ಭೂಮಿ ನೀಡುವ ಪ್ರಸ್ತಾವಕ್ಕೆ ಜಮ್ಮು, ಕಾಶ್ಮೀರ ಆಡಳಿತ ಮಂಡಳಿ ಅನುಮೋದನೆ ನೀಡಿದೆ.
ಈ ಸಂಬಂಧ, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸುಮಾರು 25 ಹೆಕ್ಟೇರ್ ಭೂಮಿಯನ್ನು ಗುತ್ತಿಗೆ ಆಧಾರದ ಮೇಲೆ 40 ವರ್ಷಗಳ ಅವಧಿಗೆ ತಿರುಮಲ ತಿರುಪತಿ ದೇವಸ್ಥಾನಕ್ಕೆ(ಟಿಟಿಡಿ) ಮಂಜೂರು ಮಾಡುವ ಪ್ರಸ್ತಾವಕ್ಕೆ ಒಪ್ಪಿಗೆ ದೊರಕಿದೆ.
‘25 ಹೆಕ್ಟೇರ್ ಪ್ರದೇಶದಲ್ಲಿ ಯಾತ್ರಿಗಳ ಭವನ, ವೇದ ಪಾಠ ಶಾಲೆ, ಆಧ್ಮಾತಿಕ– ಧ್ಯಾನ ಕೇಂದ್ರ, ಕಚೇರಿ, ಪಾರ್ಕಿಂಗ್ ಸೌಕರ್ಯ ಕಲ್ಪಿಸಲಾಗುವುದು. ಭವಿಷ್ಯದಲ್ಲಿ ವೈದ್ಯಕೀಯ ಮತ್ತು ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲಾಗುವುದು. ದೇವಸ್ಥಾನದ ನಿರ್ಮಾಣದಿಂದಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರಕುವ ಜೊತೆಗೆ ಆರ್ಥಿಕ ಚಟುವಟಿಕೆಗಳಿಗೆ ಪುಷ್ಟಿ ದೊರಕುತ್ತದೆ’ ಎಂದು ಟಿಟಿಡಿ ವಕ್ತಾರರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.