ತಿರುಮಲ ತಿರುಪತಿ ದೇವಸ್ಥಾನ ಮತ್ತು ತಿರುಪತಿ ಲಡ್ಡು
ತಿರುಪತಿ: ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇವಾಲಯದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ನಾಲ್ವರನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪ್ರಕರಣದಲ್ಲಿ ಸಿಬಿಐನ ವಿಶೇಷ ತನಿಖಾ ತಂಡವು ಪ್ರಸಾದ ತಯಾರಿಕೆಗೆ ತುಪ್ಪ ಪೂರೈಕೆ ಮಾಡಿದ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್, ಪೊಮಿಲ್ ಜೈನ್, ವೈಷ್ಣವಿ ಡೈರಿಯ ಅಪೂರ್ವ ಚಾವ್ಡಾ ಹಾಗೂ ಎ.ಆರ್ ಡೈರಿಯ ರಾಜು ರಾಜಶೇಖರನ್ ಅವರನ್ನು ಬಂಧಿಸಿತ್ತು.
ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್ಐಟಿ) ಆರೋಪಿಗಳ ನಿವಾಸ ಸೇರಿದಂತೆ ಇತರೆ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲು ಚೆನ್ನೈ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಿವೆ.
ಬಂಧಿತರನ್ನು ಫೆ. 20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ತುಪ್ಪ ಪೂರೈಕೆಯಲ್ಲಿ ಪ್ರತಿಯೊಂದು ನಿಯಮವನ್ನು ಉಲ್ಲಂಘಿಸಿದ್ದನ್ನು ಸುಪ್ರೀಂ ಕೊರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡವು ಪತ್ತೆ ಮಾಡಿತ್ತು. ಹೀಗಾಗಿ ಅವರನ್ನು ಬಂಧಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.