ನವದೆಹಲಿ: ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ (ಎಸ್ಐಆರ್) ಕುರಿತು ತಕ್ಷಣವೇ ಚರ್ಚೆ ಕೈಗೆತ್ತಿಕೊಳ್ಳಬೇಕು ಎಂಬ ತನ್ನ ಬೇಡಿಕೆಯನ್ನು ಟಿಎಂಸಿ ಶುಕ್ರವಾರ ಮತ್ತೊಮ್ಮೆ ಸರ್ಕಾರದ ಮುಂದಿಟ್ಟಿದೆ.
ಆಪರೇಷನ್ ಸಿಂಧೂರ ಕುರಿತು ಚರ್ಚೆ ಆರಂಭಿಸಲು ಲೋಕಸಭೆ ಸಜ್ಜಾಗಿರುವ ಹೊತ್ತಿನಲ್ಲಿಯೇ, ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತ ಚರ್ಚೆ ನಡೆಯಬೇಕು ಎಂಬ ತನ್ನ ಪಟ್ಟನ್ನು ಟಿಎಂಸಿ, ಮತ್ತಷ್ಟು ಬಿಗಿಗೊಳಿಸಿದೆ. ಈ ಮೂಲಕ, ಮುಂದಿನ ವಾರ ಈ ಬೇಡಿಕೆ ಮುಂದಿಟ್ಟುಕೊಂಡು ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸುವ ಸೂಚನೆಯನ್ನು ಕೂಡ ಟಿಎಂಸಿ ನೀಡಿದೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಪಶ್ಚಿಮ ಬಂಗಾಳದಲ್ಲಿಯೂ ಕೈಗೆತ್ತಿಕೊಳ್ಳಲಾಗುತ್ತದೆ. ಬಿಹಾರದಲ್ಲಿ ನಡೆಯುತ್ತಿರುವ ಈ ಪ್ರಕ್ರಿಯೆ ಈ ನಿಟ್ಟಿನಲ್ಲಿ ಕೈಗೊಂಡಿರುವ ತಾಲೀಮು ಅಷ್ಟೆ ಎಂದು ಟಿಎಂಸಿ ಆರೋಪಿಸಿದೆ.
ಮುಂದಿನ ವರ್ಷ ಏಪ್ರಿಲ್–ಮೇನಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹೀಗಾಗಿ ಪಕ್ಷಕ್ಕೆ ತೊಂದರೆ ನೀಡುವ ಉದ್ದೇಶದಿಂದ ಬಿಜೆಪಿಯು ಯಾವ ಮಟ್ಟಕ್ಕೂ ಹೋಗಲಿದೆ ಎಂದೂ ಆರೋಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.