ನವದೆಹಲಿ: ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಸಂಸದ ಸೌಮಿತ್ರ ಖಾನ್ ಬುಧವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಸಂಸದ ಸೌಮಿತ್ರ ಖಾನ್ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಅಧ್ಯಕ್ಷ ಮುಖಲ್ ರಾಯ್ ಉಪಸ್ಥಿತರಿದ್ದರು.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸೌಮಿತ್ರ ಖಾನ್ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಿ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆಎಂದರು.
ಸೌಮಿತ್ರ ಟಿಎಂಸಿಯ ಹಿರಿಯ ನಾಯಕರು ಆಗಿದ್ದಾರೆ. ಇವರ ಜೊತೆ ಟಿಎಂಸಿಯ ಐವರು ಸಂಸದರು ಸಂಪರ್ಕದಲ್ಲಿ ಇದ್ದಾರೆ ಎನ್ನಲಾಗಿದೆ. ಸೌಮಿತ್ರ ಪಕ್ಷ ತೊರೆದಿರುವುದು ಟಿಎಂಸಿಗೆ ಹಿನ್ನಡೆಯಾದಂತೆ ಎಂದೇ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ ಮಾಡುವ ಸುಳಿವು ನೀಡಿರುವ ಹಿನ್ನೆಲೆಯಲ್ಲಿ ಟಿಎಂಸಿಯ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ. ಕಳೆದೊಂದು ವಾರದಲ್ಲಿ 2000ಕ್ಕೂ ಹೆಚ್ಚು ಟಿಎಂಸಿ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದಾರೆ ಎಂದು ಸ್ಥಳೀಯ ಸುದ್ದಿವಾಹಿಗಳು ವರದಿ ಮಾಡಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.