ADVERTISEMENT

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇ.ಡಿ. ಎದುರು ಹಾಜರಾದ ಅಭಿಷೇಕ್ ಬ್ಯಾನರ್ಜಿ

ಪಿಟಿಐ
Published 6 ಸೆಪ್ಟೆಂಬರ್ 2021, 6:59 IST
Last Updated 6 ಸೆಪ್ಟೆಂಬರ್ 2021, 6:59 IST
ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ
ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ   

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಸೋಮವಾರ ಇಲ್ಲಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.

ಕೇಂದ್ರ ದೆಹಲಿಯಲ್ಲಿರುವ ಜಾಮ್‌ ನಗರ್‌ ಹೌಸ್‌ನಲ್ಲಿರುವ ಕೇಂದ್ರೀಯ ತನಿಖಾ ಸಂಸ್ಥೆಯ ಕಚೇರಿಗೆ ಆಗಮಿಸಿದ ಅಭಿಷೇಕ್ ಬ್ಯಾನರ್ಜಿ, ‘ತನಿಖೆ ಎದುರಿಸಲು ಸಿದ್ಧನಿದ್ದೇನೆ. ಈ ಸಂಬಂಧ ತನಿಖಾ ಸಂಸ್ಥೆಗೆ ಸಹಕಾರ ನೀಡುತ್ತೇನೆ‘ ಎಂದು ಹೇಳಿದರು.

ಪ್ರಕರಣದ ತನಿಖಾಧಿಕಾರಿಗಳು ವಿಚಾರಣೆ ವೇಳೆ ‘ಅಕ್ರಮ ಹಣ ವರ್ಗಾವಣೆ ಕಾಯ್ದೆ(ಪಿಎಂಎಲ್‌ಎ)ಯಡಿ ಅಭಿಷೇಕ್‌ ಬ್ಯಾನರ್ಜಿ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ಕೋಲ್ಕತ್ತ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಬ್ಯಾನರ್ಜಿ, ‘ಕೇಂದ್ರದ ಯಾವುದೇ ತನಿಖಾ ಸಂಸ್ಥೆ, ನಾನು ಅಕ್ರಮ ವಹಿವಾಟಿನಲ್ಲಿ ಪಾಲ್ಗೊಂಡಿರುವುದನ್ನು ಸಾಬೀತುಪಡಿಸಿದರೆ, ನಾನೇ ನೇಣು ಬಿಗಿದುಕೊಳ್ಳುತ್ತೇನೆ‘ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.