ADVERTISEMENT

ಪಶ್ಚಿಮ ಬಂಗಾಳ: ಬಾಂಬ್‌ ದಾಳಿಯಲ್ಲಿ ಟಿಎಂಸಿ ಕಾರ್ಯಕರ್ತ ಸಾವು, ಇಬ್ಬರಿಗೆ ಗಾಯ

ಪಿಟಿಐ
Published 24 ಫೆಬ್ರುವರಿ 2021, 2:44 IST
Last Updated 24 ಫೆಬ್ರುವರಿ 2021, 2:44 IST
ಸಾಂದರ್ಭಿಕ ಚಿತ್ರ (ಕೃಪೆ: ಐಸ್ಟಾಕ್)
ಸಾಂದರ್ಭಿಕ ಚಿತ್ರ (ಕೃಪೆ: ಐಸ್ಟಾಕ್)   

ಕೋಲ್ಕತ್ತ: ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದ ಬಾಂಬ್‌ ದಾಳಿಯಲ್ಲಿ ಆಡಳಿತಾರೂಢ ಟಿಎಂಸಿ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಬೈಕ್‌ನಲ್ಲಿ ಬಂದ ಆಕ್ರಮಣಕಾರರು ಬಾಂಬ್‌ ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾರಾಯಣಗಡ ಪೊಲೀಸ್ ಠಾಣೆ ವ್ಯಾಪ್ತಿಯ ಅಭಿರಾಮ್‌ಪುರ ಗ್ರಾಮದಲ್ಲಿ ಶೌಭಿಕ್ ದೊಲುಯಿ ಹಾಗೂ ಇತರ ಇಬ್ಬರು ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. ಬೈಕ್‌ನಲ್ಲಿ ಬಂದ ಮೂವರು ಬಾಂಬ್ ಎಸೆದಿದ್ದಾರೆ. ಬಾಂಬ್ ಎಸೆದು ಪರಾರಿಯಾಗುವುದಕ್ಕೂ ಮುನ್ನ ದೊಲುಯಿ ಮೇಲೆ ಗಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಮೂವರನ್ನೂ ತಕ್ಷಣವೇ ಖರಾಗ್‌ಪುರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ದೊಲುಯಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಉಳಿದಿಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೇದಿನಿಪುರದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದಾಳಿಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಸ್ಥಳೀಯ ಟಿಎಂಸಿ ನಾಯಕರು ಆರೋಪಿಸಿದ್ದಾರೆ. ಆದರೆ, ಇದು ಟಿಎಂಸಿಯ ಒಳಜಗಳದ ಪರಿಣಾಮ ಎಂದು ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ಸಮಿತ್ ದಾಸ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಆರೋಪ–ಪ್ರತ್ಯಾರೋಪಗಳೂ ತೀವ್ರಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.