ADVERTISEMENT

ತಮಿಳುನಾಡು ಕಳ್ಳಬಟ್ಟಿ ದುರಂತ: ಸಿಎಂ ಸ್ಟಾಲಿನ್ ರಾಜೀನಾಮೆಗೆ ಪಳನಿಸ್ವಾಮಿ ಆಗ್ರಹ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಮೇ 2023, 10:01 IST
Last Updated 16 ಮೇ 2023, 10:01 IST
ಎಡಪ್ಪಾಡಿ ಕೆ. ಪಳನಿಸ್ವಾಮಿ
ಎಡಪ್ಪಾಡಿ ಕೆ. ಪಳನಿಸ್ವಾಮಿ   

ವಿಲ್ಲುಪುರಂ (ತಮಿಳುನಾಡು): ತಮಿಳುನಾಡು ಕಳ್ಳಬಟ್ಟಿ ದುರಂತದ ಹೊಣೆ ಹೊತ್ತು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಜೀನಾಮೆ ಸಲ್ಲಿಸುವಂತೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಆಗ್ರಹಿಸಿದ್ದಾರೆ.

‘ರಾಜ್ಯದ ಮರಕ್ಕನಂ ತಾಲ್ಲೂಕಿನ ಇಕ್ಕಿಯಾಕುಪ್ಪಂನಲ್ಲಿ ಶನಿವಾರ ರಾತ್ರಿ ಸಂಭವಿಸಿದ್ದ ಕಳ್ಳಬಟ್ಟಿ ದುರಂತದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿದ್ದು, 51 ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಸ್ಟಾಲಿನ್ ನೇತೃತ್ವದ ಸರ್ಕಾರ ತಿಳಿಸಿದೆ.

ವಿಲ್ಲುಪುರಂನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾದ ನಂತರ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ‘ಈ ಪ್ರಕರಣವನ್ನು ಸಿಬಿ–ಸಿಐಡಿಗೆ ವಹಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದ್ದರು.

ADVERTISEMENT

‘ಅಕ್ರಮ ಸಾರಾಯಿ ತಯಾರಕರು ಮೆಥನಾಲ್ ಅನ್ನು ಬಳಸಿರುವುದು ದುರಂತಕ್ಕೆ ಕಾರಣವಾಗಿದೆ’ ಎಂದು ಪೊಲೀಸರ ಪ್ರಾಥಮಿಕ ತನಿಖೆ ಹೇಳಿದೆ.

ಇದರ ಬೆನ್ನಲ್ಲೇ ವಿರೋಧ ಪಕ್ಷಗಳಾದ ಎಐಎಡಿಎಂಕೆ ಹಾಗೂ ಪಿಎಂಕೆ, ಸ್ಟಾಲಿನ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ‘ಅಕ್ರಮ ಮದ್ಯ ತಯಾರಿಕೆ ದಂಧೆ ವಿರುದ್ಧ ಈಗಲಾದರೂ ಕ್ರಮ ಕೈಗೊಳ್ಳಿ’ ಎಂದು ಆಗ್ರಹಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.