ADVERTISEMENT

ಖಾಸಗೀಕರಣ: ಕೇಂದ್ರದ ನೀತಿ ವಿರೋಧಿಸಿ ರಾಷ್ಟ್ರವ್ಯಾಪಿ ಕಾರ್ಮಿಕ ಸಂಘಟನೆಗಳ ಮುಷ್ಕರ

ಖಾಸಗೀಕರಣ: ಕಾರ್ಮಿಕ ಸಂಘಟನೆಗಳ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2021, 7:25 IST
Last Updated 4 ನವೆಂಬರ್ 2021, 7:25 IST

ನವದೆಹಲಿ: ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ ಸಂಸತ್‌ನ ಮುಂಬರುವ ಬಜೆಟ್ ಅಧಿವೇಶನದ ವೇಳೆ ಎರಡು ದಿನ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಹತ್ತಕ್ಕೂ ಅಧಿಕ ಕಾರ್ಮಿಕ ಸಂಘಟನೆಗಳು ನಿರ್ಧರಿಸಿವೆ.

ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್‌, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಐಸಿಸಿಟಿಯು, ಎಲ್‌ಪಿಎಫ್‌, ಯುಟಿಯಸಿ ಮತ್ತಿತರ ಕಾರ್ಮಿಕ ಸಂಘಟನೆಗಳ ಮುಖಂಡರು ನವೆಂಬರ್ 1ರಂದು ನಡೆಸಿದ ಸಭೆಯಲ್ಲಿ ಮುಷ್ಕರ ನಡೆಸುವ ಕುರಿತು ಚರ್ಚಿಸಲಾಗಿದ್ದು, ಮುಷ್ಕರದ ದಿನಾಂಕವನ್ನು ಮುಂದಿನ ಸಭೆಯಲ್ಲಿ ಅಂತಿಮಗೊಳ್ಳಲಿದೆ.

ಕೇಂದ್ರದ ಖಾಸಗೀಕರಣ ನೀತಿ ಹಾಗೂ ಸರ್ಕಾರಿ ಆಸ್ತಿಯನ್ನು ಖಾಸಗಿ ಕಂಪೆನಿಗಳಿಗೆ ಪರಭಾರೆ ಮಾಡುತ್ತಿರುವ ಕ್ರಮದಿಂದ ಉಂಟಾಗುವ ಪರಿಣಾಮಗಳು, ಬೆಲೆ ಏರಿಕೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ರೈತರ ಬೇಡಿಕೆಗಳ ಈಡೇರಿಕೆಗೆ ನಿರಾಕರಿಸುತ್ತಿರುವ ಸರ್ಕಾರದ ಜನವಿರೋಧಿ ನೀತಿ ಕುರಿತು ಕಾರ್ಮಿಕ ಸಂಘಟನೆಗಳ ಸಭೆಯಲ್ಲಿ ಚರ್ಚಿಸಲಾಗಿದೆ.

ADVERTISEMENT

ಮುಷ್ಕರದ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ-- ದೆಹಲಿಯಲ್ಲಿ ಕಾರ್ಮಿಕ ಸಂಘಟನೆಗಳ ರಾಷ್ಟ್ರೀಯ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು, ನಂತರ ರಾಜ್ಯ ಮಟ್ಟದ ಸಮಾವೇಶ, ಪ್ರತಿಭಟನಾ ಮೆರವಣಿಗೆ ಹಾಗೂ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡರನ್ನು ಭೇಟಿ ಮಾಡಿ ಬೆಂಬಲ ಕೋರಲಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.