ನವದೆಹಲಿ: ಬಂಡೀಪುರ ರಾಷ್ಟ್ರೀಯ ಉದ್ಯಾನದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿದಿನ 9 ಗಂಟೆ ಸಂಚಾರ ನಿರ್ಬಂಧಿಸುವುದರಿಂದ ಕರ್ನಾಟಕ ಹಾಗೂ ಕೇರಳದ ಲಕ್ಷಾಂತರ ಜನರಿಗೆ ತೊಂದರೆ ಆಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.
ಪರಿಸರ ಸಂರಕ್ಷಣೆ ಉದ್ದೇಶದ ಜತೆಗೆ ಆ ಭಾಗದ ಸ್ಥಳೀಯ ಜನಸಮುದಾಯಗಳ ಹಿತಾಸಕ್ತಿಯನ್ನೂ ರಕ್ಷಿಸಬೇಕು ಎಂದು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.
ರಕ್ಷಿತಾರಣ್ಯದ ವನ್ಯಜೀವಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ರಾತ್ರಿ 9ರಿಂದ ಬೆಳಿಗ್ಗೆ 6 ಗಂಟೆವರೆಗೆ ಈ ಹೆದ್ದಾರಿಯಲ್ಲಿ (ಎನ್ಎಚ್ 766) ಸಂಚಾರ ನಿರ್ಬಂಧವಿದೆ. ಸಂಚಾರ ನಿರ್ಬಂಧ ವಿರೋಧಿಸಿ ಸೆಪ್ಟೆಂಬರ್ 25ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಯುವ ಜನಾಂಗಕ್ಕೆ ಬೆಂಬಲ ಸೂಚಿಸಿ ವಯನಾಡ್ ಕ್ಷೇತ್ರದ ಸಂಸದರೂ ಆಗಿರುವ ರಾಹುಲ್ ಟ್ವೀಟ್ ಮಾಡಿದ್ದಾರೆ.
ಅಭಯರಣ್ಯದ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಎತ್ತರಿಸಿದ ರಸ್ತೆ ನಿರ್ಮಿಸಬೇಕು ಎಂಬ ಪ್ರಸ್ತಾವಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಬೆಂಬಲ ಸೂಚಸಿದ್ದರು. ಸಂಚಾರ ನಿರ್ಬಂಧದಿಂದ ವಯನಾಡ್, ಕೋಯಿಕ್ಕೋಡ್ ಮತ್ತು ಮಲಪ್ಪುರ ಜಿಲ್ಲೆಗಳ ಜನರಿಗೆ ತೊಂದರೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.