ಗುವಾಹಟಿ: ಕೇಂದ್ರ ಸರ್ಕಾರದ ‘ಆಯುಷ್ಮಾನ್ ಭಾರತ್’ ಯೋಜನೆಯಲ್ಲಿ ತೃತೀಯ ಲಿಂಗಿಗಳನ್ನು ನಿರ್ಲಕ್ಷಿಸಲಾಗಿದೆ ಎಂದು ದೂರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಗುವಾಹಟಿ ಹೈಕೋರ್ಟ್, ಕೇಂದ್ರ ಮತ್ತು ಅಸ್ಸಾಂ ಸರ್ಕಾರಕ್ಕೆ ಗುರುವಾರ ನೋಟಿಸ್ ಜಾರಿಗೊಳಿಸಿದೆ.
ತೃತೀಯ ಲಿಂಗಿ ಕಾರ್ಯಕರ್ತೆ ಸ್ವಾತಿ ಬಿಧಾನ್ ಬರುಹಾ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಯೋಜನೆಗೆ ಅಟಲ್ ಅಮೃತ ಅಭಿಯಾನ ಎಂದೂ ಕರೆಯಲಾಗುತ್ತದೆ.ವಾರ್ಷಿಕ ಗರಿಷ್ಠ ₹5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬಕ್ಕೆ ಪ್ರತಿ ವರ್ಷ ₹2 ಲಕ್ಷ ಆರೋಗ್ಯ ವಿಮೆ ನೀಡುವ ಈ ಯೋಜನೆಯಲ್ಲಿ ತೃತೀಯ ಲಿಂಗಿ ಸಮುದಾಯವನ್ನು ಸೇರ್ಪಡೆ ಮಾಡಿಲ್ಲ.
‘ಹಲವು ತೃತೀಯ ಲಿಂಗಿಗಳು ಲಿಂಗಸಂಬಂಧಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಾಗುತ್ತದೆ. ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಇಂತಹ ಶಸ್ತ್ರಚಿಕಿತ್ಸೆಗೆ ಬೇಕಾದ ಸೌಲಭ್ಯಗಳ ಕೊರತೆ ಇದೆ. ಅಲ್ಲದೆ, ಅನನುಭವಿ ವೈದ್ಯರು ಶಸ್ತ್ರಚಿಕಿತ್ಸೆ ನಡೆಸುವುದರಿಂದ ಅನೇಕ ತೊಂದರೆಗಳಿಗೆ ಒಳಗಾಗುತ್ತಿದ್ದೇವೆ. ಅಲ್ಲದೆ,ಖಾಸಗಿ ಆಸ್ಪತ್ರೆಗಳಲ್ಲಿ ಇಂತಹ ಶಸ್ತ್ರಚಿಕಿತ್ಸೆಗಳಿಗೆ ಹೆಚ್ಚು ಹಣ ಕೇಳುವುದರಿಂದ ತೃತೀಯ ಲಿಂಗಿಗಳಿಗೆ ಸಮಸ್ಯೆಯಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.
‘ನಾನು ₹5ಲಕ್ಷ ಖರ್ಚು ಮಾಡಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದೇನೆ. ಆದರೆ, ಎಲ್ಲ ತೃತೀಯ ಲಿಂಗಿಗಳಿಗೆ ಇಷ್ಟು ಹಣ ಭರಿಸುವುದು ಕಷ್ಟವಾಗುತ್ತದೆ’ ಎಂದು ಸ್ವಾತಿ ಹೇಳಿದ್ದಾರೆ.
*‘ಪ್ಲಾಸ್ಟಿಕ್ ಸರ್ಜರಿ ಮತ್ತು ಲಿಂಗಪರಿವರ್ತನೆ ಶಸ್ತ್ರಚಿಕಿತ್ಸೆಗಳಿಗೂ ಈ ಯೋಜನೆಯಡಿ ವಿಮೆ ಸೌಲಭ್ಯ ಸಿಗುತ್ತದೆ. ಇದು ತೃತೀಯ ಲಿಂಗಿಗಳಿಗೆ ಅಗತ್ಯವಾಗಿದ್ದು, ನಮ್ಮನ್ನೂ ಈ ಯೋಜನೆ ವ್ಯಾಪ್ತಿಗೆ ತರಬೇಕು’ ಎಂದು ಸ್ವಾತಿ ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.