ADVERTISEMENT

ಲಖಿಂಪುರ–ಖೀರಿ ಪ್ರಕರಣದ ವಿಚಾರಣೆ ನಿಧಾನಗತಿಯಿಂದ ಸಾಗಿಲ್ಲ: ಸುಪ್ರೀಂ ಕೋರ್ಟ್

ಪಿಟಿಐ
Published 14 ಮಾರ್ಚ್ 2023, 16:00 IST
Last Updated 14 ಮಾರ್ಚ್ 2023, 16:00 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಕೇಂದ್ರ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾ ಆರೋಪಿಯಾಗಿರುವ 2021ರ ಲಖಿಂಪುರ–ಖೀರಿ ಹಿಂಸಾಚಾರ ಪ್ರಕರಣದ ವಿಚಾರಣೆಯು ನಿಧಾನಗತಿಯಿಂದ ಸಾಗುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

ವಿಚಾರಣೆಯ ಮುಂದಿನ ಬೆಳವಣಿಗೆಗಳ ಕುರಿತು ಮಾಹಿತಿ ನೀಡುವಂತೆ ಸೆಷನ್ಸ್‌ ನ್ಯಾಯಾಧೀಶರಿಗೆ ನ್ಯಾಯಾಲಯವು ನಿರ್ದೇಶನ ನೀಡಿದೆ.

ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರಿಂದ ನಮಗೆ ಮೂರು ಪತ್ರಗಳು ಬಂದಿವೆ. ಅವುಗಳನ್ನು ಪರಿಶೀಲಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಜೆ.ಕೆ.ಮಹೇಶ್ವರಿ ಅವರನ್ನೊಳಗೊಂಡ ನ್ಯಾಯಪೀಠವು ಹೇಳಿದೆ.

ADVERTISEMENT

ಈ ಪತ್ರಗಳ ಪ್ರಕಾರ ಮೂವರು ಸಾಕ್ಷಿಗಳ ವಿಚಾರಣೆ ಮುಗಿದಿದ್ದು, ಅವರಲ್ಲಿ ಒಬ್ಬರ ಪಾಟಿ ಸವಾಲು ನಡೆಯುತ್ತಿದೆ ಎಂದಿದೆ.

200 ಪ್ರಾಸಿಕ್ಯೂಷನ್‌ ಸಾಕ್ಷಿಗಳನ್ನು ಪರಿಶೀಲಿಸಬೇಕಾಗಿದೆ ಎಂದು ಸಂತ್ರಸ್ತರ ಕುಟುಂಬದವರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಪ್ರಶಾಂತ ಭೂಷನ್‌ ಅವರು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಅಲ್ಲದೆ ವಿಚಾರಣೆಯು ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.

‘ನಾವು ಮೇಲ್ನೋಟ ಎಂಬ ಪದವನ್ನು ಬಳಸುವುದಿಲ್ಲ ಆದರೆ ವಿಚಾರಣೆಯ ಮೇಲೆ ಪರೋಕ್ಷ ಮೇಲ್ವಿಚಾರಣೆ ನಡೆಸುತ್ತೇವೆ ಮತ್ತು ಅದನ್ನು ಮುಂದುವರಿಸುತ್ತೇವೆ’ ಎಂದು ನ್ಯಾಯಪೀಠ ವಿವರಿಸಿದೆ.

ಆಶಿಶ್‌ ಮಿಶ್ರಾ ಅವರಿಗೆ ಜನವರಿ 25ರಂದು ಸುಪ್ರೀಂ ಕೋರ್ಟ್‌ ಎಂಟು ವಾರಗಳು ಮಧ್ಯಂತರ ಜಾಮೀನು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.