ADVERTISEMENT

ತ್ರಿಪುರಾ ಚುನಾವಣೆ, ಬಿಜೆಪಿಯನ್ನು ಸೋಲಿಸಲಿದೆ ಟಿಎಂಸಿ: ಅಭಿಷೇಕ್ ಬ್ಯಾನರ್ಜಿ

ಐಎಎನ್ಎಸ್
Published 23 ನವೆಂಬರ್ 2021, 3:34 IST
Last Updated 23 ನವೆಂಬರ್ 2021, 3:34 IST
ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅಗರ್ತಲದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು – ಪಿಟಿಐ ಚಿತ್ರ
ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅಗರ್ತಲದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು – ಪಿಟಿಐ ಚಿತ್ರ   

ಅಗರ್ತಲ: ಕಾಂಗ್ರೆಸ್ ಮತ್ತು ಸಿಪಿಐ(ಎಂ) ಪಕ್ಷಗಳಂತೆ ತೃಣಮೂಲ ಕಾಂಗ್ರೆಸ್ ಪಕ್ಷವು (ಟಿಎಂಸಿ) ಹೆದರಿ ಪಲಾಯನ ಮಾಡುವುದಿಲ್ಲ. ತ್ರಿಪುರಾ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲಿದೆ ಎಂದು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯು ಪ್ರತಿಪಕ್ಷ ನಾಯಕರ, ಕಾರ್ಯಕರ್ತರ ಹಾಗೂ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಜನರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ. ಹಿಂದೆ ತ್ರಿಪುರಾದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ಹಾಗೂ ಸಿಪಿಐ(ಎಂ) ಪಕ್ಷಗಳಿಗೆ ಬಿಜೆಪಿ ವಿರುದ್ಧ ಹೋರಾಡಲು ಧೈರ್ಯ ಹಾಗೂ ಇಚ್ಛಾಶಕ್ತಿ ಇಲ್ಲ’ ಎಂದು ಹೇಳಿದ್ದಾರೆ.

‘ನಾವು (ಟಿಎಂಸಿ) ಕೇವಲ ಮೂರು ತಿಂಗಳ ಹಿಂದಷ್ಟೇ ತ್ರಿಪುರಾ ಪ್ರವೇಶಿಸಿದೆವು. ಇದರಿಂದ ಬಿಜೆಪಿ ಗಲಿಬಿಲಿಗೊಂಡಿದೆ’ ಎಂದು ಅವರು ಹೇಳಿದ್ದಾರೆ.

ತ್ರಿಪುರಾದಲ್ಲಿ ಪ್ರಚಾರಕ್ಕೆ ತೆರಳಿದ್ದ ಟಿಎಂಸಿ ಯುವ ಘಟಕದ ಅಧ್ಯಕ್ಷೆ ಸಯಾನಿ ಘೋಷ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಬಳಿಕ ಅಭಿಷೇಕ್ ಬ್ಯಾನರ್ಜಿ ಸೋಮವಾರ ರಾಜ್ಯಕ್ಕೆ ಬಂದಿದ್ದಾರೆ.

‘ನಮ್ಮ 11 ಮಂದಿ ಮಹಿಳಾ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆದಿದೆ. ನಾವೂ ಸಹ ದೂರು ನೀಡಿದ್ದು, ಸುಮಾರು 100 ಎಫ್‌ಐಆರ್‌ ದಾಖಲಾಗಿವೆ. ಅಪರಾಧಿಗಳನ್ನು ಬಂಧಿಸುವುದನ್ನು ಬಿಟ್ಟುಬಿಡಿ, ಘೋಷಣೆ ಕೂಗಿದ್ದಕ್ಕಾಗಿ ಸಯಾನಿ ಘೋಷ್ ಅವರನ್ನು ಬಂಧಿಸಲಾಯಿತು’ ಎಂದು ಬ್ಯಾನರ್ಜಿ ದೂರಿದ್ದಾರೆ.

ಇದೇ 25ಕ್ಕೆ ತ್ರಿಪುರಾದ ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆಯಲಿದೆ. 334 ಸ್ಥಾನಗಳಿಗೆ ನಡೆಯುತ್ತಿರುವ ಈ ಚುನಾವಣೆಯಲ್ಲಿ ಎದುರಾಳಿಗಳು ಇಲ್ಲದ ಕಾರಣ 112 ಸ್ಥಾನಗಳಲ್ಲಿ ಬಿಜೆಪಿ ಸದಸ್ಯರು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಪ್ರಚಾರದ ವೇಳೆ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಹಲವು ಬಾರಿ ಘರ್ಷಣೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.