ನವದೆಹಲಿ: ಕಲೆ, ಕ್ರೀಡೆ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡಿರುವ ಕರ್ನಾಟಕದ ಇಬ್ಬರು ಸೇರಿದಂತೆ ಒಟ್ಟು 32 ಮಕ್ಕಳನ್ನು ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ಕ್ಕೆ ಆಯ್ಕೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆ.ರಾಕೇಶಕೃಷ್ಣ (15) ಹಾಗೂ ಬೆಂಗಳೂರಿನ ವೀರಕಶ್ಯಪ್ (10) ಈ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಬಾಲಕರು.
ಪುರಸ್ಕಾರಕ್ಕೆ ಆಯ್ಕೆಯಾಗಿರುವ ಮಕ್ಕಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಜ.25) ಸಂವಾದ ನಡೆಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು,'ಆವಿಷ್ಕಾರ ವಿಭಾಗದಲ್ಲಿ ಈ ಬಾರಿಯ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ದಕ್ಷಿಣ ಕನ್ನಡದ 15 ವರ್ಷದ ಕೆ. ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್ಗೆ ಅಭಿನಂದನೆಗಳು. ನಿಮ್ಮ ಸಾಧನೆ ರಾಜ್ಯಕ್ಕೆ ಹೆಮ್ಮೆ ತರುವ ಜೊತೆಗೆ ಇತರ ಮಕ್ಕಳಿಗೆ ಮಾದರಿಯಾಗಿದೆ' ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.