ಉಮಾರಿಯಾ: ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಬಿಟಿಆರ್) ಹುಲಿಯೊಂದು ದಾಳಿ ನಡೆಸಿದ್ದು, ಅರಣ್ಯ ಇಲಾಖೆಯ ಇಬ್ಬರು ನೌಕರರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಕಾದಾಟದಲ್ಲಿ ಒಂದು ಹುಲಿ ಮೃತಪಟ್ಟು, ಮತ್ತೊಂದು ಗಾಯಗೊಂಡಿತ್ತು. ಗಾಯಗೊಂಡ ಹುಲಿಗಾಗಿ ಶನಿವಾರ ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಬಿಟಿಆರ್ನ ಪನ್ಪಥ ವ್ಯಾಪ್ತಿಯಲ್ಲಿ ಗಾಯಗೊಂಡ ಹುಲಿಯನ್ನು ಹುಡುಕುತ್ತಿದ್ದ ತಂಡದ ಮೇಲೆ ಹುಲಿ ದಾಳಿ ನಡೆಸಿದೆ. ಘಟನೆಯಲ್ಲಿ ಇಬ್ಬರು ನೌಕರರು ಗಾಯಗೊಂಡಿದ್ದಾರೆ ಎಂದು ಅರಣ್ಯ ಇಲಾಖೆಯ ಉಪವಿಭಾಗಾಧಿಕಾರಿ ಫತೇ ಸಿಂಗ್ ನಿನಾಮ ತಿಳಿಸಿದ್ದಾರೆ.
ಗಾಯಗೊಂಡ ಇಬ್ಬರು ಸಿಬ್ಬಂದಿ ಮನ್ಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಕನ್ಹಾ, ಬಾಂಧವಗಢ , ಪೆಂಚ್, ಸಾತ್ಪುರ ಮತ್ತು ಪನ್ನಾ ಸೇರಿದಂತೆ ಹಲವಾರು ಹುಲಿ ಸಂರಕ್ಷಿತ ಪ್ರದೇಶಗಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.