ಸಾಂದರ್ಭಿಕ ಚಿತ್ರ
ಪಿಟಿಐ ಸಂಗ್ರಹ ಚಿತ್ರ
ಗುರುಗ್ರಾಮ/ಮೀರಟ್: ಗುರುಗ್ರಾಮದ ನುಹ್ನ ಹಳ್ಳಿಯೊಂದರಲ್ಲಿ ಈದ್ ಪ್ರಾರ್ಥನೆಯ ಬಳಿಕ ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು (ಸೋಮವಾರ) ಬೆಳಿಗ್ಗೆ 9 ಗಂಟೆಗೆ ಈ ಘಟನೆ ನಡೆದಿದೆ. ಈದ್ಗಾ ಮೈದಾನದಲ್ಲಿ ನಮಾಜ್ ಮುಗಿಸಿ ಮನೆಗೆ ಹೋಗುತ್ತಿದ್ದ ಒಂದು ಗುಂಪಿನ ಸದಸ್ಯರು ಮತ್ತೊಂದು ಗುಂಪಿನ ಕೆಲವು ಜನರೊಂದಿಗೆ ವಾಗ್ದಾದ ನಡೆಸಿದ್ದು, ಬಳಿಕ ಹಿಂಸಾಚಾರಕ್ಕೆ ತಿರುಗಿದೆ. ಎರಡೂ ಗುಂಪುಗಳ ಜನರು ಪರಸ್ಪರ ಕೋಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಗ್ರಾಮದಲ್ಲಿ ಶಾಂತಿ ಕಾಪಾಡಲು ಪೊಲೀಸ್ ತಂಡವನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಶೀದ್ ಮತ್ತು ಸಾಜಿದ್ ಎಂಬ ಎರಡು ಗುಂಪುಗಳ ನಡುವಿನ ಹಳೆಯ ದ್ವೇಷ ಘಟನೆಗೆ ಕಾರಣವಾಗಿದೆ. ಎರಡೂ ಗುಂಪುಗಳ ವಿರುದ್ಧ ಈ ಹಿಂದೆ ಪ್ರಕರಣಗಳ ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಮೀರಟ್: ಎರಡು ಗುಂಪುಗಳ ನಡುವೆ ಘರ್ಷಣೆ , ಹಲವರಿಗೆ ಗಾಯ
ಹರಿಯಾಣದ ಮೀರಟ್ನ ಜಾನಿ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳ ನಡುವಿನ ಸಣ್ಣ ವಿವಾದವು ಒಂದೇ ಸಮುದಾಯದ ಎರಡು ಬಣಗಳ ನಡುವಿನ ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದ್ದು , ಶಾಂತಿ ಕಾಪಾಡಲು ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈದ್ ಪ್ರಾರ್ಥನೆಯ ಬಳಿಕ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಸದಸ್ಯರು ಕಲ್ಲು ತೂರಾಟ ನಡೆಸಿದ್ದಾರೆ. ಹಿಂಸಾಚಾರದಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.