ಡೆಹ್ರಾಡೂನ್: ಕುಂಭಮೇಳ ನಕಲಿ ಕೋವಿಡ್ ಪರೀಕ್ಷಾ ಹಗರಣದಲ್ಲಿ ಭಾಗಿಯಾದ ಆರೋಪದಡಿ ಉತ್ತರಾಖಂಡದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಆಗಿನ ಮೇಳ ಅಧಿಕಾರಿ (ವೈದ್ಯಕೀಯ ಮತ್ತು ಆರೋಗ್ಯ) ಡಾ.ಅರ್ಜುನ್ ಸಿಂಗ್ ಸೆಂಗಾರ್ ಮತ್ತು ಆಗಿನ ಉಸ್ತುವಾರಿ ಅಧಿಕಾರಿ (ವೈದ್ಯಕೀಯ ಮತ್ತು ಆರೋಗ್ಯ) ಡಾ.ಎನ್.ಕೆ ತ್ಯಾಗಿ ಅವರನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಗುರುವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.
ಹರಿದ್ವಾರದಲ್ಲಿ ನಡೆದ ಕುಂಭಮೇಳದಲ್ಲಿ ನಕಲಿ ಕೋವಿಡ್ ಪರೀಕ್ಷಾ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ವಿಚಾರಣೆ ನಡೆಸಲು ಹರಿದ್ವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ತನಿಖಾ ಸಮಿತಿಯನ್ನು ರಚಿಸಿದ್ದರು. ಈ ಸಮಿತಿಯ ಶಿಫಾರಸ್ಸುಗಳನ್ನು ಆಧಾರಿಸಿ ಕ್ರಮಗಳನ್ನು ಕೈಗೊಳ್ಳಲಾಗಿದೆ.
‘ವ್ಯವಸ್ಥೆಯ ಯಾವುದೇ ಮಟ್ಟದಲ್ಲಿ ಭ್ರಷ್ಟಾಚಾರ ಮತ್ತು ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ. ಹಗರಣ ಸಂಬಂಧ ತಪ್ಪಿತಸ್ಥರು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಧಾಮಿ ಅವರು ತಿಳಿಸಿದರು.
‘ಕುಂಭಮೇಳದಲ್ಲಿ ನಕಲಿ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಯನ್ನು ನಡೆಸಿದ ಕಂಪನಿಯೊಂದಿಗೆ ಅಧಿಕಾರಿಗಳು ಕೈಜೋಡಿಸಿದ್ದರು ಎಂಬುದನ್ನು ತನಿಖಾ ಸಮಿತಿಯು ಕಂಡುಕೊಂಡಿದೆ. ಸರ್ಕಾರಕ್ಕೆ ಆರ್ಥಿಕ ನಷ್ಟವನ್ನುಂಟು ಮಾಡಿದ ಮತ್ತು ಅಜಾಗೂರಕತೆ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸಮಿತಿ ಸಲಹೆ ನೀಡಿತ್ತು’ ಎಂದು ಅವರು ಮಾಹಿತಿ ನೀಡಿದರು.
ಈ ಹಗರಣದಲ್ಲಿ ಭಾಗಿಯಾದ ಕಂಪನಿ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹರಿದ್ವಾರದ ಪೊಲೀಸ್ ವರಿಷ್ಠಾಧಿಕಾರಿ ಸೆಂಥಿಲ್ ಅವೂದೈಗೆ ಸೂಚಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.