ADVERTISEMENT

ನೂಪುರ್ ಪರ ಪೋಸ್ಟ್: ರಾಜಸ್ಥಾನದಲ್ಲಿ ವ್ಯಕ್ತಿಯ ಶಿರಚ್ಛೇದ, ಪ್ರಧಾನಿಗೂ ಬೆದರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜೂನ್ 2022, 16:26 IST
Last Updated 28 ಜೂನ್ 2022, 16:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೈಪುರ: ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಬಿಜೆಪಿಮಾಜಿವಕ್ತಾರೆ ನೂಪುರ್ ಶರ್ಮಾ ಅವರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಪ್ರಕಟಿಸಿದ್ದಕ್ಕಾಗಿ ವ್ಯಕ್ತಿಯೊಬ್ಬರ ಶಿರಚ್ಛೇದ ಮಾಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ಮಂಗಳವಾರ ನಡೆದಿದೆ.

ಉದಯಪುರದ ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯ ಶಿರಚ್ಛೇದ ಮಾಡಿದ್ದಾರೆ. ಕೃತ್ಯದ ಬಳಿಕ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ, ಪ್ರಧಾನಿ ನರೇಂದ್ರ ಮೋದಿಯವರನ್ನೂ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಹತ್ಯೆಯಾದ ವ್ಯಕ್ತಿ ಕೆಲವು ದಿನಗಳ ಹಿಂದೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು ಎಂದು ತಿಳಿದುಬಂದಿದೆ.

‘ಉದಯಪುರದಲ್ಲಿ ನಡೆದ ಭೀಕರ ಹತ್ಯೆಯನ್ನು ಖಂಡಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಲಿದ್ದಾರೆ. ಜನರು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡುತ್ತೇನೆ. ಕೃತ್ಯದ ವಿಡಿಯೊವನ್ನು ಹಂಚಿಕೊಳ್ಳಬೇಡಿ. ಇಂಥ ಗಂಭೀರ ಅಪರಾಧ ಕೃತ್ಯಗಳಲ್ಲಿ ಶಾಮೀಲಾದವರಿಗೆ ಅತಿ ಕಠಿಣ ಶಿಕ್ಷೆ ನೀಡಲಾಗುವುದು’ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹೇಳಿದ್ದಾರೆ.

ನೂಪುರ್ ಶರ್ಮಾ ಅವರು ಕೆಲವು ದಿನಗಳ ಹಿಂದೆ ಪ್ರವಾದಿ ಮಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಆರೋಪಿಗಳ ಬಂಧನ

ಶಿರಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಉದಯಪುರ ಪೊಲೀಸರು ಬಂಧಿಸಿದ್ದಾರೆ.

‘ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ’ ಎಂದು ಉದಯಪುರ ಎಸ್‌ಪಿ ಮನೋಜ್ ಕುಮಾರ್ ತಿಳಿಸಿದ್ದಾರೆ.

ಈ ಮಧ್ಯೆ, ಶಿರಚ್ಛೇದನ ಪ್ರಕರಣಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಉದಯಪುರದಲ್ಲಿ ನಡೆದ ಭೀಕರ ಹತ್ಯೆಯಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಈ ಕ್ರೌರ್ಯದ ಮೂಲಕ ಭಯೋತ್ಪಾದನೆ ಹರಡುವವರಿಗೆ ತಕ್ಷಣ ಶಿಕ್ಷೆಯಾಗಬೇಕುಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಉದಯಪುರದಲ್ಲಿ ನಡೆದ ಹಿಂಸಾತ್ಮಕ ಘಟನೆಯನ್ನು ಖಂಡಿಸುತ್ತೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸುತ್ತೇನೆ. ಧರ್ಮದ ಹೆಸರಿನಲ್ಲಿ ದ್ವೇಷ, ಹಿಂಸೆಯನ್ನು ಹರಡುವುದು ದೇಶ ಮತ್ತು ಸಮಾಜಕ್ಕೆ ಮಾರಕವಾಗಿದೆ. ನಾವು ಒಟ್ಟಾಗಿ ಶಾಂತಿ ಮತ್ತು ಅಹಿಂಸೆಗಾಗಿ ಶ್ರಮಿಸೋಣ ಎಂದುಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಉದಯಪುರದಲ್ಲಿ ಕರ್ಫ್ಯೂ, ಇಂಟರ್‌ನೆಟ್ ಸ್ಥಗಿತ

ವ್ಯಕ್ತಿಯ ಶಿರಚ್ಛೇದದ ಬೆನ್ನಲ್ಲೇ ಪ್ರತಿಭಟನೆಗಳು ಆರಂಭವಾಗಿವೆ.ಉದಯಪುರ ಜಿಲ್ಲೆಯಲ್ಲಿ 24 ಗಂಟೆಗಳ ಕಾಲ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಲಾಗಿದೆ.ಜಿಲ್ಲೆಯ 7 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಹೇರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.