ADVERTISEMENT

ಭಾರತ-ಚೀನಾ ಗಡಿ ಉದ್ವಿಗ್ನತೆ ಶಮನಕ್ಕೆ ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಕರೆ

ಪಿಟಿಐ
Published 14 ಡಿಸೆಂಬರ್ 2022, 4:27 IST
Last Updated 14 ಡಿಸೆಂಬರ್ 2022, 4:27 IST
   

ವಿಶ್ವಸಂಸ್ಥೆ: ಅರುಣಾಚಲ ಪ್ರದೇಶದ ತವಾಂಗ್ ವಲಯದ ಭಾರತ-ಚೀನಾ ಗಡಿಯಲ್ಲಿ ಇತ್ತೀಚೆಗೆ ಉಭಯ ದೇಶಗಳ ಸೈನಿಕರ ನಡುವೆ ಘರ್ಷಣೆ ನಡೆದಿದ್ದು, ಉದ್ವಿಗ್ನತೆಯನ್ನು ಶಮನಗೊಳಿಸುವಂತೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಮಂಗಳವಾರ ಕರೆ ನೀಡಿದ್ದಾರೆ.‌

ಡಿಸೆಂಬರ್ 9ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಚೀನಾದ ಸೈನಿಕರು ಪ್ರಯತ್ನಿಸಿದರು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಸಂಸತ್ತಿಗೆ ಮಾಹಿತಿ ನೀಡಿದರು. ಆದರೆ, ಭಾರತೀಯ ಸೇನೆಯು ದೃಢವಾಗಿ ಅವರನ್ನು ಹಿಮ್ಮೆಟ್ಟಿಸಿತು ಎಂದು ಅವರು ಹೇಳಿದ್ದರು.

ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್‌ನ ವಕ್ತಾರ ಸ್ಟೀಫನ್ ಡುಜಾರಿಕ್ , ಹೌದು, ನಾವು ವರದಿಗಳನ್ನು ನೋಡಿದ್ದೇವೆ. ಪರಿಸ್ಥಿತಿ ಉಲ್ಬಣಗೊಳ್ಳುವುದನ್ನು ತಡೆಯಲು ಹಾಗೂ ಆ ವಲಯದಲ್ಲಿ ಪ್ರಕ್ಷುಬ್ಧತೆ ಉಂಟಾಗದಂತೆ ನೋಡಿಕೊಳ್ಳಲು ಕರೆ ನೀಡುತ್ತೇವೆ ಎಂದು ಹೇಳಿದರು.

ADVERTISEMENT

ಮಂಗಳವಾರ ಬೀಜಿಂಗ್‌ನಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್‌ಬಿನ್, ಎರಡೂ ಕಡೆಯವರು ರಾಜತಾಂತ್ರಿಕ ಮತ್ತು ಮಿಲಿಟರಿ ಮಾರ್ಗಗಳ ಮೂಲಕ ಗಡಿ ಸಂಬಂಧಿತ ವಿಷಯಗಳ ಬಗ್ಗೆ ಸುಗಮ ಸಂವಹನವನ್ನು ನಡೆಸುತ್ತಿದ್ದೇವೆ ಎಂದು ಹೇಳಿದರು.

ಜೂನ್, 2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ನಡೆದ ಭೀಕರ ಘರ್ಷಣೆಯ ನಂತರ ಇದು ಭಾರತ ಮತ್ತು ಚೀನಾದ ಸೇನೆಗಳ ನಡುವಿನ ಮೊದಲ ಪ್ರಮುಖ ಘರ್ಷಣೆ ಆಗಿದೆ.

ಪ್ಯಾಂಗೊಂಗ್ ಸರೋವರ ಪ್ರದೇಶದಲ್ಲಿ ಹಿಂಸಾತ್ಮಕ ಘರ್ಷಣೆಯ ನಂತರ ಭುಗಿಲೆದ್ದ ಪೂರ್ವ ಲಡಾಖ್ ಗಡಿ ಬಿಕ್ಕಟ್ಟಿನ ನಂತರ ವಿವಿಧ ಹಂತಗಳಲ್ಲಿ ಬಿಕ್ಕಟ್ಟುಗಳನ್ನು ಪರಿಹರಿಸಲು ಎರಡೂ ದೇಶಗಳು ತಮ್ಮ ಕಮಾಂಡರ್‌ಗಳ ನಡುವೆ 16 ಸುತ್ತಿನ ಮಾತುಕತೆಗಳನ್ನು ನಡೆಸಿದ್ದವು. ಅದಾದ ನಂತರವೂ ಶುಕ್ರವಾರ ಘರ್ಷಣೆ ಸಂಭವಿಸಿದೆ.

ಸೆಪ್ಟೆಂಬರ್‌ನಲ್ಲಿ ನಡೆದ ಕೊನೆಯ ಸುತ್ತಿನ ಮಾತುಕತೆ ವೇಳೆ ಎರಡೂ ಕಡೆಯವರು ಗೋಗ್ರಾ-ಹಾಟ್ ಸ್ಪ್ರಿಂಗ್ಸ್ ಪ್ರದೇಶದಲ್ಲಿನ ಪ್ಯಾಟ್ರೋಲಿಂಗ್ ಪಾಯಿಂಟ್ 15ರಿಂದ ತಮ್ಮ ಸೇನೆಗಳನ್ನು ಹಿಂತೆಗೆದುಕೊಳ್ಳಲು ಒಪ್ಪಿಕೊಂಡಿದ್ದರು.

ಇವುಗಳನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.