ಜಿನೀವಾ: ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಭಾರತ ಸರ್ಕಾರದ ನಿರ್ಧಾರವನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ತಜ್ಞರೊಬ್ಬರುಸ್ವಾಗತಿಸಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಶೇಷ ವರದಿಗಾರ ಮಿಚೇಲ್ ಫಕ್ರಿ ಅವರು, ‘ಯಾವುದೇ ಕಾನೂನುಗಳು ಬಂದರೂ ಅದರಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗಬಾರದು. ಭಾರತದಲ್ಲಿ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳು ಭಾರತದ ಆಹಾರ ಭದ್ರತೆಗೆ ತೊಂದರೆಯುಂಟು ಮಾಡುವಂತದ್ದಾಗಿತ್ತು. ಈಗ ಆ ಕಾಯ್ದೆಗಳನ್ನು ರದ್ದುಗೊಳಿಸುವ ಕ್ರಮ ಮುತ್ಸದ್ದಿತನದ ನಡೆ’ ಎಂದು ಹೇಳಿದ್ದಾರೆ.
‘ಭಾರತದ ಕೃಷಿಯನ್ನು ಸುಧಾರಿಸುವ ಸರ್ಕಾರದ ಮುಂದಿನ ಕ್ರಮಗಳು ಮಾನವ ಹಕ್ಕುಗಳನ್ನು ಉಳಿಸುವ ಬದ್ದತೆಯನ್ನು ಒಳಗೊಂಡಿರುತ್ತವೆ ಎಂದು ನಾವು ಭಾವಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರ ಜಾರಿ ಮಾಡಿದ್ದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕಳೆದ ಒಂದು ವರ್ಷದಿಂದ ತೀವ್ರ ಪ್ರತಿಭಟನೆ ನಡೆಸಿದ್ದರು.
ನವೆಂಬರ್ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾಯ್ದೆಗಳನ್ನು ರದ್ದುಗೊಳಿಸುವ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ದೇಶದ ಜನತೆಗೆ ತಿಳಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.