ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಮುಗಿದ ನಂತರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಆದ ತಮ್ಮ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿಯೇ ಸಂಸತ್ತಿನ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುತ್ತಿದ್ದರು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ.28ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಹಣದುಬ್ಬರ ವಿಚಾರವಾಗಿ ಚರ್ಚೆ ನಡೆಸುವಂತೆ ಸರ್ವಪಕ್ಷಗಳು ಒತ್ತಾಯಿಸಿದ್ದವು. ಹೀಗಾಗಿ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷಗಳಿಗೆ ಸದನದಲ್ಲಿ ಚರ್ಚೆಗೆ ಅನುಮತಿ ನೀಡಲಾಯಿತು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಸಭೆಯಲ್ಲಿ ಸರ್ಕಾರದ ಪರವಾಗಿ ಪ್ರತಿಕ್ರಿಯಿಸಲು ಹಾಜರಿದ್ದರು. ಆದರೆ, ವಿರೋಧ ಪಕ್ಷಗಳು ಈ ವಿಚಾರದ ಚರ್ಚೆ ವೇಳೆ ಸದನದಿಂದ ಹೊರನಡೆದವು.
'ತರಾತುರಿಯಿಂದ ಮತ್ತು ವಿರೋಧ ಪಕ್ಷಗಳಿಗೆ ಮಾತನಾಡಲು ಅವಕಾಶವೇ ನೀಡದಂತೆ ಮಸೂದೆಯನ್ನು ಅಂಗೀಕರಿಸಲಾಗಿದೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನೂ ನಿಯಮಾವಳಿಗಳ ಪ್ರಕಾರವೇ ನಡೆಸಲಾಗಿದೆ. ಒಂದು ವೇಳೆ ವಿರೋಧ ಪಕ್ಷಗಳ ಸದಸ್ಯರು ಸದನದಲ್ಲಿ ಕುಳಿತಿದ್ದರೆ, ಈ ವಿಚಾರವಾಗಿ ಚರ್ಚೆ ನಡೆಯುತ್ತಿತ್ತು. ಆದರೆ, ಅವರು ಗದ್ದಲವನ್ನು ಮುಂದುವರಿಸಿದರು' ಎಂದಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದ ಕಾರ್ಯಚಟುವಟಿಕೆಗಳ ಬಗ್ಗೆ ಮಾತನಾಡಿದ ಅವರು, 'ಅಧಿವೇಶನವು ನವೆಂಬರ್ 29ರಂದು ಆರಂಭವಾಯಿತು ಮತ್ತು ಉದ್ದೇಶಿತ ವೇಳಾಪಟ್ಟಿಗಿಂತ ಒಂದು ದಿನ ಮೊದಲು ಡಿ.22ರಂದು ಅನಿರ್ಧಿಷ್ಟಾವಧಿಗೆ ಮುಂದೂಡಲಾಯಿತು. 24 ದಿನಗಳ ಕಾಲ ನಡೆದ ಅಧಿವೇಶನದಲ್ಲಿ 18 ದಿನ ಕಲಾಪ ನಡೆದಿದೆ' ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.