ನವದೆಹಲಿ: ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ಧಾರವಾಡ ಜಿಲ್ಲೆಯ ನವಲಗುಂದ ಬೈಪಾಸ್ ರಸ್ತೆ ಕಾಮಗಾರಿಗೆ ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ. ಈ ಕಾಮಗಾರಿಯ ಅಂದಾಜು ವೆಚ್ಚ ₹327 ಕೋಟಿ.
ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆಯೇ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಬೈಪಾಸ್ ಸಂಬಂಧ ಸಲ್ಲಿಸಿದ್ದ ಜೋಡಣೆ ಮತ್ತು ವಿವರವಾದ ಯೋಜನಾ ವರದಿಗೆ ಸಚಿವಾಲಯದ ಉನ್ನತ ಸಮಿತಿ ಅನುಮೋದನೆ ನೀಡಿದೆ. ನವಲಗುಂದ ಪಟ್ಟಣಕ್ಕೆ 10.575 ಕಿ.ಮೀ. ಉದ್ದದ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.
ಬೆಣ್ಣೆಹಳ್ಳ ಮತ್ತು ಅದನ್ನು ಸೇರುವ ಸಣ್ಣ ನಾಲಾಗಳು ಮಳೆಗಾಲದಲ್ಲಿ ತುಂಬಿ ಹರಿದು ಪ್ರವಾಹ ಪರಿಸ್ಥಿತಿ ಎದುರಾಗುತ್ತಿತ್ತು. ಇದರಿಂದ ಕೃಷಿ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸುತ್ತಿತ್ತು ಮತ್ತು ಅನೇಕ ಕಡೆ ಸಂಪರ್ಕ ಕಡಿತಗೊಳ್ಳುತ್ತಿತ್ತು. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಬೈಪಾಸ್ ನಿರ್ಮಾಣಕ್ಕೆ ಪ್ರಯತ್ನ ನಡೆಸಲಾಗಿತ್ತು ಎಂದು ಅವರು ಹೇಳಿದ್ದಾರೆ.
ಬೈಪಾಸ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗಳಿಗೆ ತ್ವರಿತ ಚಾಲನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಹುಬ್ಬಳ್ಳಿ-ಕುಷ್ಟಗಿ ನೂತನ ಎಕ್ಸ್ಪ್ರೆಸ್ ರೈಲಿಗೆ ಅನುಮೋದನೆ: ಹುಬ್ಬಳ್ಳಿ-ಕುಷ್ಟಗಿ ಮಧ್ಯೆ ನೂತನ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಗುರುವಾರ ಬೆಳಿಗ್ಗೆ 10.30ಕ್ಕೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಈ ರೈಲಿಗೆ ಚಾಲನೆ ನೀಡಲಿದ್ದಾರೆ. ಈ ರೈಲು ಪ್ರತಿನಿತ್ಯ ಸಂಚರಿಸಲಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.