ಹೈದರಾಬಾದ್: ಕೊರೊನಾ ವೈರಸ್ ಸಾಂಕ್ರಾಮಿಕ ನಿಯಂತ್ರಿಸಲು ಎಲ್ಲ ರಾಜ್ಯ ಸರ್ಕಾರಗಳು ದೆಹಲಿ ಮಾದರಿಯನ್ನು ಅನುಸರಿಸಬೇಕು ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಶನಿವಾರ ಹೇಳಿದ್ದಾರೆ.
ಪರೀಕ್ಷೆ, ಸೋಂಕಿತರ ಮೂಲ ಪತ್ತೆ, ಚಿಕಿತ್ಸೆಗೆ (ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ಮೆಂಟ್) ಹೆಚ್ಚು ಒತ್ತು ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಸೋಂಕು ಪತ್ತೆ ಪರೀಕ್ಷೆ ಹೆಚ್ಚಿಸಬೇಕಾದ ಅಗತ್ಯವಿದೆ. ದೆಹಲಿಯಲ್ಲಿ ಖುದ್ದು ನಾನೇ ಪರಿಸ್ಥಿತಿ ನಿಭಾಯಿಸುತ್ತಿದ್ದೇನೆ. ಅಲ್ಲಿ ಚೇತರಿಕೆ ಪ್ರಮಾಣ ಶೇ 84ರಷ್ಟಿದೆ. ಎಲ್ಲ ರಾಜ್ಯಗಳು ದೆಹಲಿ ಮಾದರಿಯನ್ನು ಅನುಸರಿಸಬೇಕಿದೆ ಎಂದು ಅವರು ಹೇಳಿದ್ದಾರೆ.
ತೆಲಂಗಾಣ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ (ಟಿಐಎಂಎಸ್) ಭೇಟಿ ನೀಡಿದ ವೇಳೆ ಅವರು ಈ ಹೇಳಿಕೆ ನೀಡಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂದೆಯೂ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೆರವಾಗಲಿದೆ. ಪಿಪಿಇ ಕಿಟ್ಗಳು ಮತ್ತು ವೆಂಟಿಲೇಟರ್ಗಳನ್ನು ತೆಲಂಗಾಣಕ್ಕೆ ನೀಡಲಿದೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿ ಬಗ್ಗೆ ರಾಜ್ಯ ಸರ್ಕಾರ ಕಾಳಜಿವಹಿಸಬೇಕು ಎಂದು ಸಚಿವರು ಹೇಳಿದ್ದಾರೆ.
ಜನರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಧಾವಿಸದೆ ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದೂ ಅವರು ಕರೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.