ADVERTISEMENT

ವಿಮಾನ ನಿಲ್ದಾಣ: ತೆಲಂಗಾಣ ಸಿಎಂಗೆ ಕೇಂದ್ರ ಸಚಿವ ಕಿಶನ್‌ ರೆಡ್ಡಿ ಪತ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಫೆಬ್ರುವರಿ 2023, 4:41 IST
Last Updated 16 ಫೆಬ್ರುವರಿ 2023, 4:41 IST
ಸಚಿವ ಕಿಶನ್‌ ರೆಡ್ಡಿ
ಸಚಿವ ಕಿಶನ್‌ ರೆಡ್ಡಿ   

ಹೈದರಾಬಾದ್: ತೆಲಂಗಾಣದಲ್ಲಿ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರಿಗೆ ಕೇಂದ್ರ ಪ್ರವಾಸೋದ್ಯಮ, ಈಶಾನ್ಯ ರಾಜ್ಯಗಳ ಸಂಸ್ಕೃತಿ ಮತ್ತು ಅಭಿವೃದ್ಧಿ ಸಚಿವ ಜಿ. ಕಿಶನ್ ರೆಡ್ಡಿ ಪತ್ರ ಬರೆದಿದ್ದಾರೆ.

ಈ ಕುರಿತಂತೆ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಸಹಕಾರ ನೀಡುವಂತೆ ಅವರು ಮನವಿ ಮಾಡಿದ್ದಾರೆ. ಇಲ್ಲಿ ವಾಯು ಸಂಪರ್ಕವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಲು ಮುಂದಾಗಿದೆ. ಇದಕ್ಕೆ ತೆಲಂಗಾಣ ಸರ್ಕಾರ ಸಹಕಾರ ನೀಡಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

ಕೇಂದ್ರದ ವಿವಿಧ ಯೋಜನೆಗಳ ಉಪಯೋಗಳನ್ನು ಪಡೆದುಕೊಂಡು ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳನ್ನು ಮಾಡಬೇಕು. ‘ಉಡಾನ್’ ಯೋಜನೆ ಅಡಿಯಲ್ಲಿ ಅದಿಲಾಬಾದ್, ನಿಜಾಮಾಬಾದ್ ಮತ್ತು ವಾರಂಗಲ್‌ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅವರು ಹೇಳಿದ್ದಾರೆ.

ಈ ಹಿಂದೆ ವಿಮಾನಯಾನ ಸಚಿವರು ಪತ್ರ ಬರೆದರೂ ರಾಜ್ಯ ಸರಕಾರ ಸ್ಪಂದಿಸಿಲ್ಲ. ಕೇಂದ್ರ ಸರಕಾರ ನೀಡುವ ಸಹಕಾರವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ವಿಚಾರವಾಗಿ ಕಿಶನ್‌ ರೆಡ್ಡಿ ಬರೆದಿರುವ ಎರಡನೇ ಪತ್ರ ಇದಾಗಿದೆ.

ವಿಮಾನಯಾನ ಇಲಾಖೆ, ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಪತ್ರಗಳನ್ನು ಬರೆದಿದೆ. ವಿಮಾನಯಾನ ಸಚಿವರು ಕೂಡ ಪತ್ರ ಬರೆದು, ಸಹಕಾರ ಕೋರಿದ್ದಾರೆ. ಆದ್ರೆ, ಮುಖ್ಯಮಂತ್ರಿಗಳ ಕಚೇರಿಯಿಂದ ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ಬಾರದಿರುವುದು ವಿಷಾದನೀಯ ಎಂದು ಕಿಶನ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.