ADVERTISEMENT

ಭದ್ರತಾ ಸಿಬ್ಬಂದಿಯಿಂದ ಕಿರುಕುಳ : ಕೋರ್ಟ್‌ ಮೊರೆ ಹೋದ ಉನ್ನಾವೊ ಸಂತ್ರಸ್ತೆ

ಪಿಟಿಐ
Published 1 ಆಗಸ್ಟ್ 2021, 10:21 IST
Last Updated 1 ಆಗಸ್ಟ್ 2021, 10:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸುಪ್ರೀಂಕೋರ್ಟ್‌ ನಿರ್ದೇಶನದ ಮೇರೆಗೆ ತನ್ನ ರಕ್ಷಣೆಗೆ ನಿಯೋಜನೆಗೊಂಡಿದ್ದ ವೈಯಕ್ತಿಕ ಭದ್ರತಾ ಸಿಬ್ಬಂದಿ (ಪಿಎಸ್‌ಒ) ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಈ ಕುರಿತು ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಧರ್ಮೇಶ್‌ ಶರ್ಮಾ ಅವರು ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖಾಧಿಕಾರಿಗೆ ಪರಿಶೀಲನಾ ವರದಿ ಸಲ್ಲಿಸುವಂತೆ ಸೂಚಿಸಿದರು. ಇದಕ್ಕೆ ಜಿಲ್ಲಾ ಪೊಲೀಸರ ನೆರವು ಪಡೆಯುವಂತೆಯೂ ಹೇಳಿದರು.

ಜುಲೈ 31ರಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸಿದ ನ್ಯಾಯಾಧೀಶರು, ‘ಸುಪ್ರೀಂಕೋರ್ಟ್‌ ನಿರ್ದೇಶನದ ಮೇರೆಗೆ ನಿಯೋಜನೆಗೊಂಡಿರುವ ಭದ್ರತಾ ಸಿಬ್ಬಂದಿಯು ಸಂತ್ರಸ್ತೆ ಮತ್ತು ಅವರ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಅರ್ಜಿ ಸಲ್ಲಿಕೆಯಾಗಿದೆ. ಸಂತ್ರಸ್ತೆಗೆ ಸ್ವಾತಂತ್ರ್ಯವನ್ನು ಆನಂದಿಸಲು ಈ ಭದ್ರತಾ ಅಧಿಕಾರಿಗಳು ಅನುಮತಿ ನೀಡುತ್ತಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ’ ಎಂದು ತಿಳಿಸಿದರು.

ADVERTISEMENT

ಪೊಲೀಸರಿಂದ ಮೊಹರು ಮಾಡಿದ ಲಕೋಟೆಯನ್ನೂ ಸ್ವೀಕರಿಸಲಾಗಿದೆ. ಇದರಲ್ಲಿ ದೂರುದಾರರು ಮತ್ತು ಆಕೆಯ ಕುಟುಂಬದ ಸದಸ್ಯರ ವಿರುದ್ಧ ಕೆಲವು ಆರೋಪಗಳನ್ನು ಹೊರಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದರು.

ಈ ಅರ್ಜಿಯನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ ಎಂದು ಸೆಷನ್ಸ್ ನ್ಯಾಯಾಧೀಶರು ತಿಳಿಸಿದರು.

ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್‌ ಸಿಂಗ್‌ ಸೆಂಗರ್‌ ಅವರು 2017ರಲ್ಲಿ ಈ ಸಂತ್ರಸ್ತೆಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದರು. ಆಗ ಸಂತ್ರಸ್ತೆ ಬಾಲಕಿಯಾಗಿದ್ದಳು. ಈ ಪ್ರಕರಣದ ವಿಚಾರಣೆ ಉನ್ನಾವೊದಿಂದ ದೆಹಲಿಗೆ ವರ್ಗಾಯಿಸಲಾಗಿತ್ತು. ಸಿಬಿಐ ತನಿಖೆ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.