ADVERTISEMENT

ಉನ್ನಾವ್ ಅತ್ಯಾಚಾರ ಪ್ರಕರಣ ತ್ವರಿತ ನ್ಯಾಯಾಲಯಕ್ಕೆ : ಯೋಗಿ ಆದಿತ್ಯನಾಥ್

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2019, 9:01 IST
Last Updated 7 ಡಿಸೆಂಬರ್ 2019, 9:01 IST
   

ಲಖನೌ: ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟ ಉನ್ನಾವ್‌ ಅತ್ಯಾಚಾರ ಸಂತ್ರಸ್ತೆ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಪ್ರಕರಣವನ್ನು ತ್ವರಿತ ನ್ಯಾಯಾಲಯಕ್ಕೆ ಒಪ್ಪಿಸಲಾಗುತ್ತದೆಎಂದು ಭರವಸೆ ನೀಡಿದ್ದಾರೆ.

ಈ ಕುರಿತು ಶನಿವಾರ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಸಾವು ಅತ್ಯಂತ ದುಃಖಕರ ಮತ್ತು ದುರದೃಷ್ಟಕರ. ಪ್ರಕರಣದ ಎಲ್ಲ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ ಎಂದು ಹೇಳಿದರು.

ಸರ್ಕಾರವು ಪ್ರಕರಣವನ್ನು ತ್ವರಿತ ನ್ಯಾಯಾಲಯಕ್ಕೆ ಒಪ್ಪಿಸುತ್ತದೆಮತ್ತು ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಸಂತ್ರಸ್ತೆಯ ಕುಟುಂಬಕ್ಕೆ ಇತರೆ ಬಿಜೆಪಿ ಮುಖಂಡರು ಕೂಡ ಸಂತಾಪ ಸೂಚಿಸಿದ್ದಾರೆ.

ADVERTISEMENT

ಶೇ. 90ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ 23 ವರ್ಷದ ಉನ್ನಾವ್ ಅತ್ಯಾಚಾರ ಸಂತ್ರಸ್ತೆಯನ್ನು ಏರ್ ಲಿಫ್ಟ್‌ ಮೂಲಕ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಏರ್‌ಲಿಫ್ಟ್‌ ಆದ 40 ಗಂಟೆಗಳ ಬಳಿಕ ಹೃದಯಾಘಾತದಿಂದಾಗಿ ಸಂತ್ರಸ್ತೆಯು ಮೃತಪಟ್ಟರು ಎಂದು ವೈದ್ಯರು ತಿಳಿಸಿದ್ದಾರೆ.

ಬಳಿಕ ಸಂತ್ರಸ್ತೆಯ ಮೃತದೇಹವನ್ನು ಆಸ್ಪತ್ರೆಯ ಮರಣೋತ್ತರ ವಿಭಾಗಕ್ಕೆ ರವಾನಿಸಲಾಯಿತು. ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಪರೀಕ್ಷೆಯ ವರದಿಯನ್ನು ಪೊಲೀಸರಿಗೆ ನೀಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.