ಲಖನೌ: ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಶಂಕಿತ ಡೆಂಗಿ ಜ್ವರದಿಂದಾಗಿ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.
ಕಳೆದ 24 ತಾಸಿನಲ್ಲಿ ಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಸಂಬಂಧ ಕಠಿಣ ಕ್ರಮ ಕೈಗೊಂಡಿರುವ ಜಿಲ್ಲಾಧಿಕಾರಿಯು, ಫಿರೋಜಾಬಾದ್ನ ಮೂವರು ವೈದ್ಯರನ್ನು ಅಮಾನತುಗೊಳಿಸಿದ್ದಾರೆ. ಅಲ್ಲದೆ ರೋಗಿಗಳ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ತೋರಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಫಿರೋಜಾಬಾದ್ನಲ್ಲಿ ಆಗಸ್ಟ್ 18ರಿಂದಲೇ ಶಂಕಿತ ಡೆಂಗಿ ಹಾಗೂ ವೈರಲ್ ಜ್ವರಕ್ಕೆ ಹಲವರು ಮೃತಪಟ್ಟಿದ್ದಾರೆ. ಇದರಿಂದಾಗಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ.
ಸ್ಥಳಕ್ಕೆ ಭೇಟಿ ಕೊಟ್ಟಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಂಡವು ಪರಿಶೀಲನೆ ನಡೆಸುತ್ತಿದೆ. 11 ಸದಸ್ಯರ ಐಪಿಎಂಆರ್ ತಂಡ, ಉತ್ತರ ಪ್ರದೇಶದ ಆರೋಗ್ಯ ಇಲಾಖೆ ಮತ್ತು ಮತ್ತೊಂದು 18 ಸದಸ್ಯರ ವೈದ್ಯಕೀಯ ತಂಡವು ಸೇರಿ ಜ್ವರದ ಹಿಂದಿನ ನಿಖರ ಕಾರಣಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದೆ.
ವಿವಿಧ ಪ್ರದೇಶಗಳಿಗೆ ಭೇಟಿ ನೀಡಿರುವ ವೈದ್ಯಕೀಯ ತಂಡವು, ಜ್ವರದಿಂದ ಬಳಲುತ್ತಿರುವ ರೋಗಿಗಳಿಂದ ಮಾಹಿತಿ ಹಾಗೂ ಮಾದರಿಯನ್ನು ಕಲೆ ಹಾಕಿದರು.
ಏತನ್ಮಧ್ಯೆ ಶುಚಿತ್ವವನ್ನು ಕಾಪಾಡಲು ಹಾಗೂ ಸೊಳ್ಳೆಗಳ ಹರಡುವಿಕೆ ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಫಿರೋಜಾಬಾದ್ಗೆ ಸಮಾನವಾಗಿ ಹತ್ತಿರದ ಮಥುರಾ, ಇಟಾ ಮತ್ತು ಮೈನ್ಪುರಿ ಜಿಲ್ಲೆಗಳಲ್ಲೂ ಪ್ರಕರಣಗಳು ವರಯಾಗಿವೆ ಎಂದು ವೈದ್ಯಕೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದು ಕಳವಳಕ್ಕೆ ಕಾರಣವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.