ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಎರಡು ದಿನಗಳ ಭೇಟಿ ನಿಮಿತ್ತ ಯೋಗಿ ಆದಿತ್ಯನಾಥ ಅವರು ದೆಹಲಿಗೆ ಬಂದಿದ್ದಾರೆ. ನಾಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉತ್ತರ ಪ್ರದೇಶದ ಕಾಂಗ್ರೆಸ್ ಮುಖಂಡ ಜಿತೇಂದ್ರ ಪ್ರಸಾದ್ ಬುಧವಾರ ಬಿಜೆಪಿಗೆ ಸೇರಿದ್ದರು. ಇದರ ಬೆನ್ನೆಲ್ಲೇ ಯೋಗಿ ಆದಿತ್ಯನಾಥ್ ಅವರು ಬಿಜೆಪಿ ವರಿಷ್ಠರನ್ನು ಭೇಟಿ ಮಾಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಉತ್ತರ ಪ್ರದೇಶ ವಿಧಾನಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವದ್ದಾಗಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದು, ಚುನಾವಣೆಗೆ ಪಕ್ಷದ ಸಿದ್ಧತೆಗಳನ್ನು ಪರಿಶೀಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.