ADVERTISEMENT

ಹಾಥರಸ್‌ ಘಟನೆಯನ್ನು ದುರಂತವೆಂದು ಘೋಷಿಸಲಿ: ರಾಹುಲ್‌ ಗಾಂಧಿ

ಪಿಟಿಐ
Published 6 ಅಕ್ಟೋಬರ್ 2020, 15:00 IST
Last Updated 6 ಅಕ್ಟೋಬರ್ 2020, 15:00 IST
ರಾಹುಲ್‌ ಗಾಂಧಿ 
ರಾಹುಲ್‌ ಗಾಂಧಿ    

ಪಟಿಯಾಲ: ‘ಹಾಥರಸ್‌ನಲ್ಲಿ ದಲಿತ ಯುವತಿಯೊಬ್ಬಳುಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿದ್ದು, ಅದನ್ನು ದುರಂತವೆಂದುಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘೋಷಿಸಬೇಕು’ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ಪಂಜಾಬ್‌ನಲ್ಲಿ ನಡೆಯುತ್ತಿರುವ ‘ಖೇತಿ ಬಚಾವೊ’ ಯಾತ್ರೆಯಲ್ಲಿ ಪಾಲ್ಗೊಂಡಿರುವ ರಾಹುಲ್‌, ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಹರಿಹಾಯ್ದಿದ್ದಾರೆ.

‘ಯೋಗಿ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತೆಯ ಕುಟುಂಬದ ಸದಸ್ಯರಿಗೆ ಸೂಕ್ತ ಭದ್ರತೆ ಒದಗಿಸಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.

ADVERTISEMENT

ಹಾಥರಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಭುಗಿಲೆದ್ದಿರುವ ಆಕ್ರೋಶದ ಹಿಂದೆ ಅಂತರರಾಷ್ಟ್ರೀಯ ಪಿತೂರಿ ಇದೆ ಎಂದು ಯೋಗಿ ಅವರು ದೂರಿದ್ದಾರೆ. ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ‘ಯೋಗಿ ಅವರಿಗೆ ಹಾಗೆ ಅನಿಸಿರಬಹುದು. ಅದು ಅವರ ಅಭಿಪ್ರಾಯ. ಅವರು ತಮಗೆ ಬೇಕಾದ್ದನ್ನೆಲ್ಲಾ ಕಲ್ಪಿಸಿಕೊಳ್ಳಲಿ. ವಾಸ್ತವವೇನೆಂದರೆ ಹಾಥರಸ್‌ನಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆಕೆಯ ಕುತ್ತಿಗೆಗೆ ಪೆಟ್ಟಾಗಿತ್ತು. ಆಕೆಯ ಕುಟುಂಬದವರಿಗೆ ಬೆದರಿಕೆ ಹಾಕಲಾಗುತ್ತಿದೆ. ಇಷ್ಟೆಲ್ಲಾ ಆದರೂ ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದಿದ್ದಾರೆ.

‘ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಇಷ್ಟಾದರೂ ಇಡೀ ಆಡಳಿತವೇ ಸಂತ್ರಸ್ತೆಯ ಕುಟುಂಬದ ಮೇಲೆ ದಾಳಿ ನಡೆಸುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರು ಒಂದೇ ಒಂದು ಮಾತು ಕೂಡ ಆಡಿಲ್ಲ. ಸಂತ್ರಸ್ತೆಯ ಕುಟುಂಬ ಏಕಾಂಗಿಯಲ್ಲ. ಅವರ ಬೆಂಬಲಕ್ಕೆ ನಾವು ಇದ್ದೇವೆ. ಇದನ್ನು ಮನವರಿಕೆ ಮಾಡಿಕೊಡುವ ಸಲುವಾಗಿಯೇ ಆ ಕುಟುಂಬವನ್ನು ಮತ್ತೊಮ್ಮೆ ಭೇಟಿ ಮಾಡಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.