ADVERTISEMENT

ಅಯೋಧ್ಯೆಯಲ್ಲಿ ಸಂಪುಟ ಸಭೆ: ಯುಪಿ ಇತಿಹಾಸದಲ್ಲಿ ಹೊಸ ಅಧ್ಯಾಯ ಎಂದ ಸಿಎಂ ಯೋಗಿ

ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಕಥಾ ವಸ್ತು ಸಂಗ್ರಹಾಲಯದಲ್ಲಿ ಉತ್ತರ ಪ್ರದೇಶ ರಾಜ್ಯ ಕಾರ್ಯಕಾರಿಣಿ ಸಭೆ ನಡೆದಿದೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ನವೆಂಬರ್ 2023, 11:50 IST
Last Updated 9 ನವೆಂಬರ್ 2023, 11:50 IST
<div class="paragraphs"><p>&nbsp; ಯುಪಿ ಸಿಎಂ ಯೋಗಿ ಆದಿತ್ಯನಾಥ್</p></div>

  ಯುಪಿ ಸಿಎಂ ಯೋಗಿ ಆದಿತ್ಯನಾಥ್

   

ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯ ರಾಮ ಕಥಾ ವಸ್ತು ಸಂಗ್ರಹಾಲಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಸಚಿವ ಸಂಪುಟದ ವಿಶೇಷ ಸಭೆ ನಡೆದಿದೆ.

ಸಭೆ ಬಳಿಕ ಮಾತನಾಡಿದ ಸಿಎಂ ಯೋಗಿ, 'ಪವಿತ್ರ ನಗರವಾದ ಅಯೋಧ್ಯೆಯಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದೆ. ಇಂದು ಉತ್ತರ ಪ್ರದೇಶದ ಇತಿಹಾಸದಲ್ಲಿ ಹೊಸ ಅಧ್ಯಾಯ ಸೇರ್ಪಡೆಯಾಗಿದೆ' ಎಂದು ಹೇಳಿದ್ದಾರೆ.

ADVERTISEMENT

‘ಉತ್ತರ ಪ್ರದೇಶ ಸರ್ಕಾರದ ಇಡೀ ಸಚಿವ ಸಂಪುಟ ಅಯೋಧ್ಯಾಧಾಮಕ್ಕೆ ಆಗಮಿಸಿದೆ. ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಿತು. ಇಂದಿನ ಸಂಪುಟ ಸಭೆಯಲ್ಲಿ 14 ಪ್ರಮುಖ ಪ್ರಸ್ತಾವನೆಗಳನ್ನು ತರಲಾಗಿದೆ. ಅವುಗಳಲ್ಲಿ ಉತ್ತರ ಪ್ರದೇಶದಲ್ಲಿ ಒಳನಾಡು ಜಲಮಾರ್ಗ ಪ್ರಾಧಿಕಾರ ಸ್ಥಾಪನೆ ಮೊದಲ ಪ್ರಸ್ತಾವನೆ. ರಾಜ್ಯ ಮಟ್ಟದಲ್ಲಿ ಈ ಪ್ರಾಧಿಕಾರ ರಚಿಸಲು ನಿರ್ಧರಿಸಿದ್ದೇವೆ' ಎಂದು ಮುಖ್ಯಮಂತ್ರಿ ಹೇಳಿದರು.

ಚಳಿಗಾಲದ ಅಧಿವೇಶನದ ದಿನಾಂಕ ಘೋಷಣೆ:

ಇದೇ ವೇಳೆ ಉತ್ತರ ಪ್ರದೇಶ ವಿಧಾನಸಭೆಯ ಚಳಿಗಾಲದ ಅಧಿವೇಶನದ ದಿನಾಂಕವನ್ನೂ ಸಿಎಂ ಘೋಷಿಸಿದ್ದಾರೆ. ಅಧಿವೇಶನ. 'ನ.28ರಿಂದ ಪ್ರಾರಂಭವಾಗಲಿದ್ದು, ಒಂದು ವಾರದವರೆಗೆ ನಡೆಯಲಿದೆ' ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಸಿಎಂ ಯೋಗಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಹನುಮಾನ್‌ಗರ್ಹಿ ದೇವಸ್ಥಾನ ಮತ್ತು ರಾಮ್ ಲಲ್ಲಾ ವಿರಾಜಮಾನ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಇದೇ ಮೊದಲ ಬಾರಿಗೆ ಪವಿತ್ರ ನಗರ ಅಯೋಧ್ಯೆಯ ರಾಮಕಥಾ ವಸ್ತು ಸಂಗ್ರಹಾಲಯದಲ್ಲಿ ರಾಜ್ಯದ ಕಾರ್ಯಕಾರಿಣಿ ಸಭೆ ನಡೆದಿದೆ. ವಸ್ತುಸಂಗ್ರಹಾಲಯವನ್ನು ಭವ್ಯವಾಗಿ ಅಲಂಕರಿಸಲಾಗಿತ್ತು. ಸಂಪುಟ ಸಭೆಯ ಸಭಾಂಗಣದಲ್ಲಿ ಶ್ರೀರಾಮ ಮತ್ತು ಹನುಮಂತನ ಪೋಸ್ಟರ್‌ಗಳನ್ನು ಹಾಕಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.