ADVERTISEMENT

ಉತ್ತರಾಖಂಡ: ಇಂದು ಬಿಜೆಪಿ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ

ಪಿಟಿಐ
Published 3 ಜುಲೈ 2021, 6:32 IST
Last Updated 3 ಜುಲೈ 2021, 6:32 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಡೆಹ್ರಾಡೂನ್‌: ಉತ್ತರಾಖಂಡದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಶನಿವಾರ ಮಧ್ಯಾಹ್ನ ನಡೆಯಲಿದ್ದು, ನೂತನ ನಾಯಕನ ಆಯ್ಕೆ ನಡೆಯಲಿದೆ.

ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಕೇಂದ್ರದ ನಾಯಕರಾದ ನರೇಂದ್ರ ತೋಮರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರಾಖಂಡ ಉಸ್ತುವಾರಿ ದುಷ್ಯಂತ್ ಕುಮಾರ್ ಗೌತಮ್ ಪಾಲ್ಗೊಳ್ಳುವರು.

ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕಾಗಿ ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಹಲವು ನಾಯಕರ ಹೆಸರುಗಳು ಮುನ್ನೆಲೆಗೆ ಬಂದಿವೆ. ಮುಖಂಡ ಚೌಬಟ್ಟಾಖಲ್‌, ಸಚಿವ ಸತ್ಪಾಲ್ ಮಹಾರಾಜ್‌, ಶಾಸಕರಾದ ಧನ್ ಸಿಂಗ್ ರಾವತ್, ಶಾಸಕ ಪುಷ್ಕರ್ ಸಿಂಗ್ ಧಾಮಿ ಅವರ ಹೆಸರುಗಳು ಕೇಳಿ ಬರುತ್ತಿವೆ.

ADVERTISEMENT

ಪಕ್ಷದ ಹಲವು ಮುಖಂಡರು, ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್‌ ಅವರ ಹೆಸರನ್ನು ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ತೀರಥ್ ಸಿಂಗ್ ರಾವತ್ ಅವರು ಶುಕ್ರವಾರ ರಾಜೀನಾಮೆ ನೀಡಿದ್ದರಿಂದ ನೂತನ ಸಾರಥಿಯ ಆಯ್ಕೆಗಾಗಿ ಬಿಜೆಪಿ ಪಾಳೆಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿವೆ. ತೀರಥ್‌ ಸಿಂಗ್‌ ಅವರು ರಾಜೀನಾಮೆ ನೀಡುವ ಮೂಲಕ, ಪಕ್ಷದ ನಾಯಕತ್ವ ಬದಲಾವಣೆ ಕುರಿತು ಕೆಲವು ದಿನಗಳಿಂದ ಕೇಳಿ ಬರುತ್ತಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಪಕ್ಷದ ಸೂಚನೆ ನೀಡಿದ ಬೆನ್ನಲ್ಲೇ, ಅವರು ರಾಜ್ಯಪಾಲರಾದಬೇಬಿ ರಾಣಿ ಮೌರ್ಯ ಅವರಿಗೆ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.