ADVERTISEMENT

ಕಾನ್ಪುರ | ಒತ್ತುವರಿ ತೆರವು ವೇಳೆ ಮಹಿಳೆಯರ ಸಾವು; ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಐಎಎನ್ಎಸ್
Published 14 ಫೆಬ್ರುವರಿ 2023, 6:39 IST
Last Updated 14 ಫೆಬ್ರುವರಿ 2023, 6:39 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಉತ್ತರ ಪ್ರದೇಶ: ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಇಬ್ಬರು ಮಹಿಳೆಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಯಿತಾ ಉಪ ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಒಟ್ಟು 24 ಜನರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಹತ್ತಕ್ಕೂ ಹೆಚ್ಚು ಅಪರಿಚಿತರ ವಿರುದ್ಧವೂ ಕೊಲೆ ಹಾಗೂ ಕೊಲೆಗೆ ಯತ್ನ ಪ್ರಕರಣಗಳನ್ನೂ ದಾಖಲಿಸಲಾಗಿದೆ.

ಕಾನ್ಪುರ ಗ್ರಾಮಾಂತರ ಜಿಲ್ಲೆಯ ರುರಾ ಪ್ರದೇಶದಲ್ಲಿರುವ ಮದೌಲಿ ಗ್ರಾಮದಲ್ಲಿ ಸೋಮವಾರ ಸಂಜೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಇಬ್ಬರು ಮಹಿಳೆಯರು (ತಾಯಿ, ಮಗಳು) ಬೆಂಕಿ ಹೊತ್ತಿಕೊಂಡು ಮೃತಪಟ್ಟಿದ್ದರು.

ಮಹಿಳೆಯರು ಸ್ವತಃ ಬೆಂಕಿ ಹಚ್ಚಿಕೊಂಡರು ಎಂದು ಪೊಲೀಸರು ಹೇಳಿದ್ದಾರೆ. ಆದರೆ ಮೃತರ ಕುಟುಂಬದವರು, ಅವರಿಬ್ಬರು (ಮೃತರು) ಒಳಗಿದ್ದ ಸಂದರ್ಭದಲ್ಲಿ ಪೊಲೀಸರೇ ಗುಡಿಸಲಿಗೆ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ADVERTISEMENT

ಜಿಲ್ಲಾಡಳಿತ, ಕಂದಾಯ ಇಲಾಖೆ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಅಧಿಕಾರಿಗಳು ಯಾವುದೇ ನೋಟಿಸ್‌ ನೀಡದೆ ಬುಲ್ಡೋಜರ್‌ಗಳೊಂದಿಗೆ ಆಗಮಿಸಿದ್ದರು ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

ಮಹಿಳೆಯರ ಸಾವಿನ ನಂತರ ಸ್ಥಳದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿತ್ತು. ಗ್ರಾಮಸ್ಥರು ಪೊಲೀಸರತ್ತ ಕಲ್ಲು, ಇಟ್ಟಿಗೆಗಳನ್ನು ತೂರಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಅಲ್ಲಿಂದ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.